ರಾಜ್ಯ Archives » Dynamic Leader
October 17, 2024
Home Archive by category ರಾಜ್ಯ

ರಾಜ್ಯ

ರಾಜ್ಯ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಯಮಬಾಹಿರ ವರ್ಗಾವಣೆಯಾಗಿದ್ದ ಹಣವನ್ನು ತಕ್ಷಣವೇ ನಿಗಮಕ್ಕೆ ಬಿಡುಗಡೆ ಮಾಡಿ ಜನಾಂಗದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ವಾಲ್ಮೀಕಿ ನಾಯಕ ಸಮಾಜದ ನಿಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಶಾಸಕರಾದ ಬಿ.ಎಂ.ನಾಗರಾಜ, ಟಿ.ರಘುಮೂರ್ತಿ, ಬಸನಗೌಡ ತುರವಿಹಾಳ, ರಾಜಾ ವೇಣುಗೋಪಾಲ ನಾಯಕ, ಡಾ.ಶ್ರೀನಿವಾಸ, ಲೋಕಸೇವಾ ಆಯೋಗದ ಮಾಜಿ ಸದಸ್ಯ ಜಿ.ಟಿ.ಚಂದ್ರಶೇಖರಪ್ಪ ಮತ್ತಿತರ ಮುಖಂಡರನ್ನೊಳಗೊಂಡ ವಾಲ್ಮೀಕಿ ನಾಯಕ ಸಮಾಜದ ನಿಯೋಗದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು  ಭೇಟಿಯಾಗಿ ಚರ್ಚಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಯಮಬಾಹಿರ ವರ್ಗಾವಣೆಯಾಗಿದ್ದ ಹಣವನ್ನು ತಕ್ಷಣವೇ ನಿಗಮಕ್ಕೆ ಬಿಡುಗಡೆ ಮಾಡಿ ಜನಾಂಗದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು ಹಾಗೂ ತಳವಾರ ಹೆಸರಿನಲ್ಲಿ ನಕಲಿ ಪರಿಶಿಷ್ಟ ಪಂಗಡ ಪ್ರಮಾಣಪತ್ರ ಪಡೆಯುತ್ತಿರುವುದನ್ನು ತಡೆಯಲು ಅಗತ್ಯ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ಈ ಬಗ್ಗೆ ತಕ್ಷಣ ಸಭೆ ಕರೆದು ಚರ್ಚಿಸಿ, ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಮಂತ್ರಿಗಳು ನಿಯೋಗಕ್ಕೆ ಭರವಸೆ ನೀಡಿದರು.

ರಾಜ್ಯ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮುವಾದ, ಸರ್ವಾಧಿಕಾರ ಮತ್ತು ಹಿಂಸೆಯಿಂದ ಕೂಡಿರುವ ಜಗತ್ತಿನಲ್ಲಿ ಸತ್ಯ, ಶಾಂತಿ ಮತ್ತು ಅಹಿಂಸೆಯ ಸಾಕಾರಮೂರ್ತಿಯಾಗಿದ್ದ ಮಹಾತ್ಮ ಗಾಂಧೀಜಿಯವರು ಮಾತ್ರ ನಮ್ಮ ಕೈಹಿಡಿದು ಮುನ್ನಡೆಸಬಲ್ಲರು ಎಂದು ಹೇಳಿದ್ದಾರೆ.

ಸತ್ಯದ ಸತ್ವ ಪರೀಕ್ಷೆಯನ್ನು ಎದುರಿಸುತ್ತಿರುವ ಈಗಿನ ನನ್ನ ಹೋರಾಟಕ್ಕೆ ಕೂಡಾ ಬಾಪುವಿನ ಬದುಕು ಮತ್ತು ಚಿಂತನೆಗಳೇ ಧೈರ್ಯ, ಶಕ್ತಿ ಮತ್ತು ಭರವಸೆಯನ್ನು ನೀಡಿದೆ ಎಂದು ಹೇಳಿದ್ದಾರೆ.

ರಾಜ್ಯ

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಿಸಿ, ಪ್ರಶಸ್ತಿ ವಿಜೇತರಿಗೆ ಗೌರವಿಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ, ಜೀವಮಾನದ ಸಾಧನೆ ಪ್ರಶಸ್ತಿ ಪುರಸ್ಕೃತರಾದ ಡಾ.ಉಮಾಶ್ರೀ, ಪ್ರೊ.ಎಚ್.ಎಸ್. ಶಿವಪ್ರಕಾಶ್, ಕೋಟಿಗಾನಹಳ್ಳಿ ರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಡಾ.ಧರಣೀದೇವಿ ಮಾಲಗತ್ತಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ

ಮಂಡ್ಯ: ನಾಗಮಂಗಲ ತಾಲೂಕಿನ ಮಲ್ಲೇಗೌಡನಹಳ್ಳಿ ಕೆರೆ ಕಟ್ಟೆಗೆ ಇಂದು ಭೇಟಿ ನೀಡಿದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಲ್ಲಿ ಪರಿಶೀಲನೆ ನಡೆಸಿದರು.

ಕೆರೆ ಏರಿ ಒಡೆದ ಪರಿಣಾಮ ಅಪಾರ ಪ್ರಮಾಣದಲ್ಲಿ ರೈತರ ಬೆಳೆ ನಾಶವಾಗಿದೆ. ನೊಂದ ರೈತರಿಗೆ ಧೈರ್ಯ ಹೇಳಿ, ಪರಿಹಾರ ಕೊಡಿಸುವ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ, ಮಾಜಿ ಸಚಿವ ಸಾರಾ ಮಹೇಶ್, ಶಾಸಕ ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಹಾಗೂ ಇನ್ನಿತರೆ ನಾಯಕರೊಂದಿಗೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

ರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿದರು.

ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ, ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು ಇಂದು ನಿರ್ಧರಿಸಲಾಗಿದೆ.

ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್ ನಲ್ಲಿ ಆರೋಗ್ಯ ಸಚಿವರು, ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಇರುತ್ತಾರೆ.

ಠಾಣಾಧಿಕಾರಿಗಳಿಗೆ ಗೊತ್ತಿಲ್ಲದೆ ಡ್ರಗ್ಸ್ ದಂಧೆ ನಡೆಯಲು ಸಾಧ್ಯವಿಲ್ಲ. ಹೀಗಾಗಿ ಠಾಣಾಧಿಕಾರಿ ಡಿವೈಎಸ್‌ಪಿ, ಎಸಿಪಿ ಮತ್ತು ಎಸ್.ಪಿ ಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ. ಕರ್ತವ್ಯಲೋಪವಾದಲ್ಲಿ ಇವರ ವಿರುದ್ಧ ಕ್ರಮ ಖಚಿತ.

ಪೆಡ್ಲರ್ ಗಳಿಗೆ ಜೀವಾವಧಿ ಶಿಕ್ಷೆಯವರೆಗೂ ಕಠಿಣ ಶಿಕ್ಷೆ ವಿಧಿಸಲು ಕಾನೂನು ತಿದ್ದುಪಡಿಗೆ ಕ್ರಮ ವಹಿಸಲಾಗುವುದು. ಈಗ ಜಾರಿ ಇರುವ ಕಾನೂನನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಮೊದಲು ಪ್ರಯತ್ನ ಮಾಡುತ್ತೇವೆ. ಇದರ ಬಳಿಕವೂ ಅಗತ್ಯಬಿದ್ದರೆ ಹೊಸ ಕಾನೂನು ಮಾಡುತ್ತೇವೆ.

ಎನ್.ಸಿ.ಸಿ, ಎನ್.ಜಿ.ಒ ಗಳನ್ನು ಬಲಗೊಳಿಸುವುದನ್ನು ಗುರಿಯಾಗಿಸಿಕೊಂಡಿದ್ದೇವೆ. ಪುನರ್ವಸತಿ ಕೇಂದ್ರಗಳನ್ನು ಹೆಚ್ಚಿಸಲು, ಸಮರ್ಪಕಗೊಳಿಸಲು ಕ್ರಮ ತೆಗೆದುಕೊಳ್ಳುತ್ತೇವೆ.

ಡ್ರಗ್ಸ್ ಹಾವಳಿ ತೊಡೆದು ಹಾಕಲು ಕ್ಷಿಪ್ರ ಮತ್ತು ತೀಕ್ಷ್ಣ ಕ್ರಮ ಕೈಗೊಳ್ಳುತ್ತೇವೆ. ವಿದ್ಯಾರ್ಥಿ, ಯುವ ಜನರ ಮೇಲೆ, ಕುಟುಂಬಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವುದನ್ನು ತಡೆಯಲು ಕ್ರಮ ವಹಿಸಲಾಗುವುದು.

ಡ್ರಗ್ಸ್ ಸೇವಿಸಿ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವ ಪ್ರಕರಣಗಳಿಗೆ ಬ್ರೇಕ್ ಹಾಕುತ್ತೇವೆ. ಪೊಲೀಸರಿಗೆ ಪೂರ್ಣ ಸ್ವಾತಂತ್ರ್ಯ ಕೊಡುವ ಜೊತೆಗೆ ಅವರನ್ನೇ ಹೊಣೆ ಮಾಡಿ ಕ್ರಮ ಕೂಡ ತೆಗೆದುಕೊಳ್ಳುತ್ತೇವೆ.

ಗೃಹ ಇಲಾಖೆ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಮಾಜ‌ ಕಲ್ಯಾಣ ಇಲಾಖೆ ಸೇರಿ ಹಲವು ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿ ಹಲವು ಕ್ಷಿಪ್ರ ತೀರ್ಮಾನಗಳನ್ನು ಕೈಗೊಂಡಿದ್ದೇವೆ.

ವಿದ್ಯಾರ್ಥಿ-ಯುವ ಜನರ, ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ಸ್ ಹಾವಳಿಗೆ ಬ್ರೇಕ್ ಹಾಕುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದೇವೆ. ಈಗಾಗಲೇ ಇರುವ ರಾಜ್ಯ ಮಟ್ಟದ ಸಮಿತಿಯಿಂದ ಮಾಹಿತಿ, ಅಭಿಪ್ರಾಯ ಸಂಗ್ರಹಿಸಿದ್ದೇವೆ.

ಬೆಂಗಳೂರು EAST ವಿಭಾಗದಲ್ಲಿ ಡ್ರಗ್ಸ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕೆ ಬಲಿ‌ ಹಾಕಲು ನಿರ್ಣಯ ಮಾಡಿದ್ದೇವೆ. ಒರಿಸ್ಸಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ ಪೂರೈಕೆ ಆಗುತ್ತಿದೆ. ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ.

ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರವಾಗಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ” ಎಂದು ಹೇಳಿದರು.

ರಾಜ್ಯ

ಕಲಬುರಗಿ: ಕಲಬುರಗಿ ತಾಲ್ಲೂಕಿನ‌ ಕವಲಗಿ (ಕೆ) ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನವರ ಜಯಂತ್ಸೋತ್ಸವವನ್ನು ಉದ್ಘಾಟಿಸಿ, ರಾಯಣ್ಣನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಿಕ ಸ್ವಾತಂತ್ರ್ಯ ಸೇನಾನಿಗೆ ಪುಷ್ಪನಮನ ಸಲ್ಲಿಸಿದರು.

ತಿಂಥಣಿ ಕಾಗಿನೆಲೆ ಪೀಠದ ಜಗದ್ಗುರು ಸಿದ್ದರಾಮಾನಂದಪುರಿ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ, ಶಾಸಕರಾದ ಎಂ.ವೈ.ಪಾಟೀಲರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ, ಸಚಿವರಾದ ಬೈರತಿ ಸುರೇಶ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್ ಸೇರಿದಂತೆ ಜಿಲ್ಲೆಯ ಶಾಸಕರು, ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

ರಾಜ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕನಸಿನ ಕೂಸು, 7 ಜಿಲ್ಲೆಗಳ ಲಕ್ಷಾಂತರ ಜನರ ಬದುಕು ಬದಲಿಸುವ “ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ”ಯ ಹಂತ-1ಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಎರಡನೇ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಹೇಳಿದ್ದಾರೆ.

ಇದು ಎರಡು ಹಂತದ ಯೋಜನೆಯಾಗಿದೆ. ಮೊದಲ ಹಂತ ಇಂದು ಉದ್ಘಾಟನೆಯಾಗಿದೆ. ಎರಡನೇ ಹಂತ ಕೂಡ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳಿಗೆ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನೆಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆ.

ಹೀಗಿದ್ದರೂ ಕೆಲವರು ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಮೂರ್ಖರನ್ನಾಗಿ ಮಾಡಲು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ.

2014ರಲ್ಲಿ ಎತ್ತಿನಹೊಳೆಗೆ ಭೂಮಿಪೂಜೆ ನೇರವೇರಿಸಿದವನು ನಾನೇ. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀನಿ. ಕೆರೆಗಳನ್ನು ತುಂಬಿಸಿಯೇ ತುಂಬಿಸ್ತೇನೆ. ಇದು ಶತಸಿದ್ಧ ಎಂದು ಹೇಳಿದರು.

ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಎಂಬ ಸೂಚನೆಯನ್ನು ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ.

ರಾಜ್ಯ

ಬೆಂಗಳೂರು: ಕರ್ನಾಟಕ ಮುಸ್ಲಿಮರ ಪ್ರಮುಖ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಸೂಕ್ತ ಹಾಗೂ ಶೀಘ್ರವಾಗಿ ಈಡೇರಿಸಲು ಒತ್ತಾಯಿಸಿ ಇದೇ ಆಗಸ್ಟ್ 22 ರಂದು ಕರ್ನಾಟಕ ಮುಸ್ಲಿಂ ಯುನಿಟಿ ವತಿಯಿಂದ ಬೆಂಗಳೂರಿನಲ್ಲಿ ಮುಸ್ಲಿಂ ಮುಖಂಡರ ಚಿಂತನಾ ಸಭೆಯನ್ನು ಆಯೋಜಿಸಲಾಗಿತ್ತು.

ಕರ್ನಾಟಕ ಮುಸ್ಲಿಂ ಯುನಿಟಿಯ ರಾಜ್ಯಾಧ್ಯಕ್ಷರಾದ ಜಬ್ಬಾರ್ ಕಲ್ಬುರ್ಗಿ ಅವರು ಅಧ್ಯಕ್ಷತೆ ವಹಿಸಿದ್ದ ಈ ಚಿಂತನಾ ಸಭೆಯಲ್ಲಿ, ರಾಜ್ಯ ಗೌರವ ಅಧ್ಯಕ್ಷರಾದ ಜಿ.ಎ.ಭಾವ, ಔಕಾಫ್ ಮಂಡಳಿ ಮಾಜಿ ಅಧ್ಯಕ್ಷರಾದ ಶಾಫಿ ಸಹದಿ, ರಾಜ್ಯ ಯುವ ಅಧ್ಯಕ್ಷ ಎಂ.ಎನ್.ನೂರ್ ಅಹಮದ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್, ಕಿತ್ತೂರು ಕರ್ನಾಟಕ ವಿಭಾಗದ ಸಂಚಾಲಕ ಎಂ.ಎಲ್.ಸರಕಾವಸ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಚಿಂತನಾ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹ್ಮದ್ ಮುಂತಾದವರಿಗೆ ಕಳುಹಿಸಿ ಕೊಡಲಾಗಿದೆ.

ಚಿಂತನಾ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳು ಮತ್ತು ಮುಖ್ಯಮಂತ್ರಿಗಳು ಹಾಗೂ ಇತರರಿಗೆ ಕಳುಹಿಸಿಕೊಟ್ಟ ಮನವಿ ಪತ್ರದ ಸಾರಾಂಶ ಈ ರೀತಿಯಿದೆ: ನಮ್ಮ ಕರ್ನಾಟಕ ರಾಜ್ಯವು ಸೂಫಿ, ಶರಣರು, ದಾಸರ ನೆಲೆಯಬೀಡಾಗಿದೆ. ನ್ಯಾಯ, ಸೌಹಾರ್ದತೆ, ಸಹಬಾಳ್ವೆಯ ಕನ್ನಡನಾಡಾಗಿದೆ. ಶೋಷಿತ ಸಮುದಾಯಗಳ ಸಾಮಾಜಿಕ ನ್ಯಾಯ ಹಾಗೂ ಸಮ ಸಮಾಜದ ಗುರಿಯೊಂದಿಗೆ ಬಸವಣ್ಣ, ಟಿಪ್ಪುಸುಲ್ತಾನ್, ಡಿ.ದೇವರಾಜ ಅರಸ್ ಅವರಂತಹ ನೂರಾರು ದಿವಂಗತ ಹುತಾತ್ಮರೆಲ್ಲರೂ ನಮ್ಮೊಂದಿಗೆ ಸೈದ್ಧಾಂತಿಕವಾಗಿ ಬದುಕಿ, ಪರಿವರ್ತನೆಯ ಸಾಮಾಜದ, ನ್ಯಾಯ ಬುನಾದಿಯ, ಸಮಾಜ ನಿರ್ಮಾಣದ ನಾಡಿಗೆ ಜೀವತುಂಬಿದ್ದಾರೆ.

ಆದರೆ, ರಾಜ್ಯದಲ್ಲಿ ಒಂದು ಕೋಟಿ ಜನಸಂಖ್ಯೆಯುಳ್ಳ ಮುಸ್ಲಿಮರ ಸಾಮಾಜಿಕ ನ್ಯಾಯ ಮಾತ್ರ ಮರೀಚಿಕೆಯಾಗಿಯೇ ಉಳಿದಿದೆ. ಮುಸ್ಲಿಮರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ ಹಾಗೂ ರಾಜಕೀಯವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಹಿಂದುಳಿದಿದ್ದಾರೆ.

ನಮ್ಮನ್ನು ಆಳಿದ ಜಾತ್ಯತೀತ / ಕೋಮುವಾದಿ ರಾಷ್ಟ್ರೀಯ ಪಕ್ಷಗಳು ಹಾಗೂ ಪ್ರಾದೇಶಿಕ ಪಕ್ಷಗಳ ಸರ್ಕಾರಗಳು ಮುಸ್ಲಿಮರ ಜನಸಂಖ್ಯೆಗೆ ಅನುಗುಣವಾಗಿ ಸರಿಯಾದ ಅಭಿವೃದ್ಧಿಯ ಯೋಜನೆಗಳನ್ನು ರೂಪಿಸಲಿಲ್ಲ. ಸರ್ಕಾರಗಳು ಇವುಗಳ ಅನುಷ್ಠಾನಕ್ಕಾಗಿ ಸೂಕ್ತ ಬಜೆಟ್ ಗಳ ಘೋಷಣೆಯನ್ನೂ ಮಾಡಲಿಲ್ಲ.

ಯಾವುದೇ ಪಕ್ಷ ಅಧಿಕಾರಕ್ಕೆ ಬಂದು ಸರ್ಕಾರ ನಡೆಸಿದರೂ ಆಯಾ ಪಕ್ಷಗಳ ಯೋಗ್ಯತೆಗೆ ತಕ್ಕಂತೆ ಮುಸ್ಲಿಮರನ್ನು ಅಭಿವೃದ್ಧಿಯಿಂದ ಹೊರಗಿಡುವ ಅಥವಾ ತಾರತಮ್ಯಮಾಡುವ ಯೋಚನೆಗಳಿಂದ ಮಾತ್ರ ಬದಲಾಗಲಿಲ್ಲ; ಇದು ಖಂಡನೀಯ.

ನಮ್ಮ ದೇಶ ಸ್ವಾತಂತ್ರ್ಯಗೊಂಡು ಇದೀಗ 78 ವರ್ಷಗಳು ಕಳೆದಿದೆ. ಆದರೆ, ಭಾರತೀಯ ಮುಸ್ಲಿಮರು ವಿಶೇಷವಾಗಿ, ಕರ್ನಾಟಕದ ಅತಿಹೆಚ್ಚು ಮುಸ್ಲಿಮರು ಬಡತನ, ನಿರುದ್ಯೋಗ, ಅನಕ್ಷರತೆಯಲ್ಲಿ ನಲುಗುತ್ತಿರುವುದು, ಕೋಮು ದೌರ್ಜನ್ಯಗಳಿಂದ ತಮ್ಮ ಸಂವಿಧಾನಾತ್ಮಕ ಹಕ್ಕುಗಳನ್ನು ಕಳೆದು ಕೊಳ್ಳುತ್ತಿರುವುದು ಶೋಚನಿಯ.

ಮುಸ್ಲಿಮರು ಎಲ್ಲಾ ಕ್ಷೆತ್ರ ಗಳಲ್ಲೂ ಹಿಂದುಳಿದಿದ್ದಾರೆ ಎಂಬ ನಗ್ನ ಸತ್ಯವನ್ನು ಡಾ.ಗೋಪಾಲ್ ಸಿಂಗ್ ವರದಿ, ಜಸ್ಟೀಸ್ ರಾಜೇಂದ್ರ ಸಾಚಾರ್ ಸಮಿತಿಯ ವರದಿ, ಜಸ್ಟೀಸ್ ರಂಗನಾಥ್ ಮಿಶ್ರ ವರದಿ, ಪ್ರೊಫೆಸರ್ ಕುಂಡು ಮುಂತಾದ ಕೇಂದ್ರ ಸರ್ಕಾರಗಳು ನೇಮಿಸಿದ ಸಮಿತಿ-ಆಯೋಗಗಳೇ ಮುಸ್ಲಿಮರ ಈ ಚಿಂತಾಜನಕ ದುಸ್ಥಿತಿಗಳನ್ನು ಬಹಿರಂಗ ಪಡೆಸಿವೆ.

ಅಲ್ಲದೆ, ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಆಯೋಗಗಳು ಸಹ ಮುಸ್ಲಿಮರು ಹಿಂದುಳಿದಿದ್ದಾರೆ ಮತ್ತು ಅಭಿವೃದ್ಧಿಯಿಂದಲೂ ವಂಚಿತರಾಗಿದ್ದಾರೆ ಎಂದು ಹೇಳಿವೆ. ಇಷ್ಟಲ್ಲದೆ, ಮುಸ್ಲಿಮರಿಗಾಗಿ ಸಂವಿಧಾನಬದ್ದವಾಗಿ ಜಾರಿಗೊಂಡಿದ್ದ ಮೀಸಲಾತಿಯನ್ನು ಸಹ ಕಿತ್ತುಕೊಳ್ಳಲಾಗಿದೆ.

ರಾಜ್ಯದಲ್ಲಿ OBC ಯ ಹಾವನೂರು, ಪ್ರೊ.ರವಿವರ್ಮ ಕುಮಾರ್ ಆಯೋಗಗಳಿಂದ ಹಿಡಿದು ಡಾ.ಸಿ.ಎಸ್.ದ್ವಾರಕನಾಥ್ ಆಯೋಗದವರೆಗೆ ಸ್ವತಂತ್ರ ನಂತರ ಕಳೆದ 78 ವರ್ಷಗಳಲ್ಲಿ ಬಂದಿರುವ ಎಲ್ಲ ಕೇಂದ್ರ, ರಾಜ್ಯ ಆಯೋಗಗಳು ಸಹ ಮುಸ್ಲಿಮರನ್ನು ಹಿಂದುಳಿದ ವರ್ಗ ಎಂದೇ ಗುರುತಿಸಿದೆ.

ನ್ಯಾಯಮೂರ್ತಿ ಚಿನ್ನಪ್ಪರೆಡ್ಡಿ ಆಯೋಗದ ಅಧ್ಯಯನದ ಪೂರ್ಣವರದಿಯ ಶಿಫಾರಸ್ಸುಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಿಂದುಳಿದ ವರ್ಗದಲ್ಲಿ ಶೇ.4ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಲಾಗಿತ್ತು.

ವೀರಪ್ಪ ಮೊಯಿಲಿ ಅವರ ಸರ್ಕಾರದ ಅವಧಿಯಲ್ಲಿ ಮೊದಲ ಬಾರಿಗೆ ಕರ್ನಾಟಕ ಅಲ್ಪಸಂಖ್ಯಾತರ ಆಯೋಗವನ್ನು ರಚಿಸಿ, ಅಂದಿನ ಅಧ್ಯಕ್ಷರಾಗಿದ್ದ ಕೆ.ರೆಹಮಾನ್ ಖಾನ್ ನೇತೃತ್ವದಲ್ಲಿ ಕರ್ನಾಟಕದ ಮುಸ್ಲಿಮರ ಸಾಮಾಜಿಕ, ಆರ್ಥಿಕ ವರದಿಯ ಆಧಾರದ ಮೇಲೆ ಮೊದಲ ಬಾರಿಗೆ ಶೇ.6ರಷ್ಟು ಮೀಸಲಾತಿಯನ್ನು ಕಲ್ಪಿಸಲಾಯಿತು.

ನಂತರ ರಾಜ್ಯದ ಮೀಸಲಾತಿ ಮಿತಿ ಶೇ.50ಕ್ಕೂ ಮೀರಿ ಹೆಚ್ಚಳವಾದ ಕಾರಣ, ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾದ ನಂತರ, ಮತ್ತೆ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿಯನ್ನು ಹಿಂದಿನಂತೆಯೇ ಕಲ್ಪಿಸಲಾಯಿತು. ಇದೀಗ, ಮುಸ್ಲಿಮರ ಅಭಿವೃದ್ಧಿಗೆ ಒಂದಷ್ಟು ಆಸರೆಯಾಗಿದ್ದ ಆ ಮೀಸಲಾತಿಯನ್ನೂ ಸಹ ಕಿತ್ತುಕೊಳ್ಳಲಾಗಿದೆ.

ಇಂತಹ ಎಲ್ಲಾ ಕ್ಷೇತ್ರಗಳಲ್ಲಿ ಹಿಂದುಳಿದ, ತಾರತಮ್ಯಕ್ಕೆ ಒಳಗಾದ, ಅಭಿವೃದ್ಧಿಯಿಂದ ವಂಚನೆಗೆ ಒಳಗಾದ, ಕೋಮುವಾದಿಗಳ ದೌರ್ಜನ್ಯಕ್ಕೆ ಒಳಗಾದ ಹಾಗೂ ರಾಜಕೀಯವಾಗಿ ಸಮಾನ ಪಾಲುಸಿಗದ ಮುಸ್ಲಿಮರಾದ ನಾವು ನಮ್ಮ ಹಕ್ಕುಗಳಿಗಾಗಿ ಸಾಮಾಜಿಕ ನ್ಯಾಯಕ್ಕಾಗಿ ಈ ಕೆಳಕಂಡ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಲು ನಾವು ಸರ್ಕಾರಕ್ಕೆ ಆಗ್ರಹಿಸುತ್ತಿದ್ದೇವೆ.

ಸರಕಾರಕ್ಕೆ ನಮ್ಮ ಹಕ್ಕೋತ್ತಾಯಗಳು:
ವಕ್ಫ್ ಮಂಡಳಿಯಲ್ಲಿ ಬದಲಾವಣೆಗಳನ್ನು ತರುವ ಮೂಲಕ ವಕ್ಫ್ನ ಹಕ್ಕು ಮತ್ತು ಸ್ವತಂತ್ರವನ್ನು ಮೋಟುಕುಗೊಳಿಸುವ ಕೇಂದ್ರ ಸರ್ಕಾರದ ಹೊಸ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರಾಜ್ಯ ಸರ್ಕಾರ ನಿರ್ಣಯವನ್ನು ಕೈಗೊಳ್ಳಬೇಕು.

ಒಬಿಸಿ ಮುಸ್ಲಿಂ 2B ಮೀಸಲಾತಿಯನ್ನು ಮರುಸ್ಥಾಪಿಸಬೇಕು. 4% ಮೀಸಲಾತಿಯನ್ನು ಶೇ.8ಕ್ಕೆ ಹೆಚ್ಚಿಸಬೇಕು.

ಸ್ಥಳೀಯವಾಗಿ ನಡೆಯುವ ಚುನಾವಣೆಗಳಲ್ಲಿ, ಒಬಿಸಿ ಮೀಸಲಾತಿಯಲ್ಲಿ ಪ್ರಬಲ ಜಾತಿಗಳಿಂದ ಮುಸ್ಲಿಮರು ಅವಕಾಶ ವಂಚಿತರಾಗುತ್ತಿದ್ದಾರೆ. ಇದಕ್ಕೆ ಪರಿಹಾರವಾಗಿ ಈ ಮೀಸಲಿನಲ್ಲಿ ಒಳಮೀಸಲು ತಂದು ಮುಸ್ಲಿಮರಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕು.

ಅತಿ ಹಿಂದುಳಿದ ನದಾಫ್ – ಪಿಂಜಾರ ಸಮುದಾಯಗಳ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿ / ಸಕ್ರಿಯಗೊಳಿಸಿ ಸೂಕ್ತ ಅನುದಾನ ಬಿಡುಗಡೆ ಮಾಡಬೇಕು.

ರಾಜ್ಯದ ಮುಸ್ಲಿಮ್ ಲೈಸನ್ಸ್ ಗುತ್ತಿಗೆದಾರರಿಗೆ ಆಧ್ಯತೆ ಹಾಗೂ ವಿಶೇಷ ಅವಕಾಶಗಳನ್ನು ನೀಡಬೇಕು.

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಇಂದು ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ.

ಇದೇ ವೇಳೆ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಸಲ್ಲಿಕೆಯಾಗಿರುವ ಅರ್ಜಿಗಳ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ ಗೆ ಹೈಕೋರ್ಟ್ ಸೂಚಿಸಿದ್ದು ಈ ಮೂಲಕ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಆಗಿರುವ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನಂತರ ನ್ಯಾಯಮೂರ್ತಿಗಳು ಮಧ್ಯಂತರ ಆದೇಶ ನೀಡಿದರು.

ಸಾಮಾಜಿಕ ಹೋರಾಟಗಾರರಾದ ಸ್ನೇಹಮಯಿ ಕೃಷ್ಣ ಮತ್ತು ಟಿ.ಜೆ.ಅಬ್ರಹಾಂ ಅವರು ಸಲ್ಲಿಸಿರುವ ದೂರುಗಳ ಮುಂದಿನ ವಿಚಾರಣೆಯನ್ನು ಆಗಸ್ಟ್ 20 ಮತ್ತು 21ರಂದು ವಿಶೇಷ ನ್ಯಾಯಾಲಯದಲ್ಲಿ ಕ್ರಮವಾಗಿ ನಡೆಯಲಿದೆ ಎಂದು ಅರ್ಜಿದಾರರ ಪರ ವಕೀಲರು ಸೂಚಿಸಿದ ನಂತರ ಮಧ್ಯಂತರ ಆದೇಶವನ್ನು ನೀಡಲಾಗಿದೆ. ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ದೂರುದಾರರಾದ ಪ್ರತಿವಾದಿಗಳಿಗೆ ಕಾಲಾವಕಾಶ ನೀಡಲಾಗಿದೆ.

ರಾಜ್ಯ

78ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ನಾಡಿನ ಜನತೆಗೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದೇಶ!

ಆತ್ಮೀಯ ಬಂಧುಗಳೆ, ನಾಡಿನ ಸಮಸ್ತ ಜನತೆಗೆ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು.

ಸ್ವಾತಂತ್ರ್ಯದ ಅರಿವು ಮತ್ತು ದೇಶದ ಮೇಲಿನ ಅಭಿಮಾನದ ಕಿಚ್ಚನ್ನು ಹೊತ್ತಿಸಿದ್ದು ರಾಷ್ಟ್ರೀಯ ಚಳುವಳಿ. ಅದರ ನೇತೃತ್ವವನ್ನು ಹೊತ್ತಿದ್ದು ಮಹಾತ್ಮ ಗಾಂಧೀಜಿಯವರ ಮುಂದಾಳತ್ವದ ರಾಷ್ಟ್ರೀಯ ಕಾಂಗ್ರೆಸ್. ಈ ರಾಷ್ಟ್ರೀಯ ಚಳುವಳಿಯ ಭದ್ರ ಬುನಾದಿ ಮೇಲೆ ರೂಪುಗೊಂಡಿದ್ದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ್ದ ಭಾರತದ ಸಂವಿಧಾನ ಮತ್ತು ಅದನ್ನು ಆಧರಿಸಿದ ಪ್ರಜಾಪ್ರಭುತ್ವ.

ಸ್ವಾತಂತ್ರ್ಯೋತ್ಸವ ಎನ್ನುವುದು ಕೇವಲ ಸಂಭ್ರಮಾಚರಣೆಯ ದಿನ ಆಗಬಾರದು, ಇದು ಪ್ರಜೆಗಳಾದ ನಮ್ಮೆಲ್ಲರ ಕರ್ತವ್ಯವನ್ನು ನೆನಪು ಮಾಡಿಕೊಳ್ಳುವ ದಿನವೂ ಆಗಬೇಕು.

ಪ್ರಜೆಗಳಾಗಿ ನಾವು ಪ್ರತಿಕ್ಷಣವೂ ಜಾಗೃತರಾಗಿದ್ದು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದಮನ ಮಾಡುವ ದುಷ್ಟಶಕ್ತಿಗಳ ಕುಟಿಲ ಪ್ರಯತ್ನವನ್ನು ವಿಫಲಗೊಳಿಸಿ ಅದನ್ನು ರಕ್ಷಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ.

ಈ ಕರ್ತವ್ಯದ ಪಾಲನೆಯೇ ನಿಜವಾದ ದೇಶಭಕ್ತಿ, ಇದು ತ್ಯಾಗ-ಬಲಿದಾನದ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಮ್ಮ ಹಿರಿಯರಿಗೆ ಸಲ್ಲಿಸುವ ಗೌರವವೂ ಹೌದು.

ದೇಶಭಕ್ತಿ ಎನ್ನುವುದು ನನ್ನ ಪಾಲಿಗೆ ಕೇವಲ ರಾಜಕೀಯ ಬೂಟಾಟಿಕೆಯ ಘೋಷಣೆ ಅಲ್ಲ. ಅದು ನಾಡಿನ ಪ್ರತಿಯೊಬ್ಬ ಪ್ರಜೆಯ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ದಿ ಹಾಗೂ ಸಾಮಾಜಿಕ ಸಾಮರಸ್ಯದ ರಕ್ಷಣೆಯ ಹೊಣೆಗಾರಿಕೆಯ ಸಂಕಲ್ಪ.

ಈ ಹೊಣೆಗಾರಿಕೆಯನ್ನು ಪ್ರಾಮಾಣಿಕವಾಗಿ ನೆರವೇರಿಸಿ ರಾಜ್ಯದ ಜನರ ಶ್ರೇಯೋಭಿವೃದ್ಧಿ ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕೆ ಎದುರಾಗುವ ಸವಾಲುಗಳಿಂದ ಕುಗ್ಗುವ, ಜಗ್ಗುವ ಇಲ್ಲವೇ ಹಿಮ್ಮೆಟ್ಟುವ ಪ್ರಶ್ನೆಯೇ ಇಲ್ಲ. ಈ ಹೋರಾಟದ ಕೆಚ್ಚಿಗೆ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಬದುಕೇ ದೊಡ್ಡ ಸ್ಪೂರ್ತಿ.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನಾವು ಎದುರಿಸಿದ್ದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂದು ಸಾಧ್ಯವಾಗಿದೆ ಎಂದು ಹೇಳಲು ಹೆಮ್ಮೆ ಎನಿಸುತ್ತಿದೆ. ಬಡತನ, ಅನಕ್ಷರತೆ, ನಿರುದ್ಯೋಗ ಸಮಸ್ಯೆಗಳನ್ನು ಯಶಸ್ವಿಯಾಗಿ ಎದುರಿಸಿದ್ದೇವೆ. ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬನೆಯನ್ನು ಸಾಧಿಸಿದ್ದೇವೆ.

ಆದರೆ ಜಾತಿ ಮತ್ತು ಧರ್ಮದ ಸೋಗಿನಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಸಾಮರಸ್ಯವನ್ನು ಕೆಡಿಸುವ ಪ್ರಯತ್ನ ನಮ್ಮ ಅಭಿವೃದ್ಧಿಯ ಓಟಕ್ಕೆ ತೊಡರುಗಾಲಾಗಿದೆ. ಇಂತಹ ಪ್ರಯತ್ನಗಳನ್ನು ಭಂಗಗೊಳಿಸಿ ಶರಣರು, ಸಂತರು, ಸೂಫಿಗಳು, ದಾರ್ಶನಿಕರು ಜನ್ಮ ತಳೆದ ನಮ್ಮ ಕನ್ನಡನಾಡನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ.

ನಮ್ಮ ರಾಜ್ಯದ ಸರ್ವರನ್ನೂ ಒಳಗೊಂಡ ಸುಸ್ಥಿರ ಅಭಿವೃದ್ಧಿ ಮಾದರಿ ಇಂದು “ಕರ್ನಾಟಕ ಮಾದರಿ’ ಎಂದು ದೇಶಪ್ರಸಿದ್ಧವಾಗಿದೆ ಎಂದು ಹೇಳಲು ನನಗೆ ಹೆಮ್ಮೆ ಅನಿಸುತ್ತಿದೆ. ನಮ್ಮ ರಾಜ್ಯ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಸಾಧಿಸಿದ್ದು, ಹಲವು ಕ್ಷೇತ್ರಗಳಲ್ಲಿ ದೇಶಕ್ಕೆ ಮಾದರಿಯಾಗಿದೆ. ವಿಜ್ಞಾನ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ.

ಮೂಲಸೌಕರ್ಯಗಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ಕೈಗಾರಿಕಾ ಅಭಿವೃದ್ಧಿ, ಕೌಶಾಲ್ಯಾಭಿವೃದ್ಧಿ, ಆರೋಗ್ಯ, ಶಿಕ್ಷಣ, ಸಮಾಜ ಕಲ್ಯಾಣ, ಉದ್ಯೋಗ ಸೃಷ್ಟಿ, ಜನಸ್ನೇಹಿ ಆಡಳಿತ ನಮ್ಮ ಕನಸು ಮಾತ್ರವಲ್ಲ; ಇದೇ ಗುರಿಯಾಗಿದೆ. ಈ ಗುರಿ ಸಾಧನೆಯತ್ತ ಮುನ್ನಡೆಯುವುದೇ ನಮ್ಮ ಧ್ಯೇಯವಾಗಿದೆ.

ಸಾರ್ವತ್ರಿಕ ಕನಿಷ್ಠ ಆದಾಯ (Universal Basic Income) ಪರಿಕಲ್ಪನೆಯಲ್ಲಿ, ಎಲ್ಲರಿಗೂ ಬದುಕಲು ಬೇಕಾದಷ್ಟು ಆದಾಯ ಸಿಗಬೇಕು ಎಂಬ ಕಾರಣದಿಂದಲೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಬೆಲೆ ಏರಿಕೆ, ನಿರುದ್ಯೋಗದಿಂದ ತತ್ತರಿಸಿರುವ ಜನತೆಗೆ ಇವು ಆರ್ಥಿಕ ಶಕ್ತಿಯನ್ನು ನೀಡುತ್ತಿವೆ. ಅದರಲ್ಲೂ ನೇರವಾಗಿ ಹಣಕಾಸಿನ ನೆರವು ಒದಗಿಸುವ ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳು ಸಾರ್ವತ್ರಿಕ ಕನಿಷ್ಠ ಆದಾಯ ಮಾದರಿಯ ಕಲ್ಯಾಣ ಯೋಜನೆಗಳಾಗಿವೆ.

ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆಗಳು ಲಿಂಗ ಸಮಾನತೆಯತ್ತ ದೃಢ ಹೆಜ್ಜೆಯನ್ನು ಇರಿಸಿದೆ. ದುಡಿಮೆ ಮಾಡುತ್ತಿರುವ ಮಹಿಳೆಯರಿಗೂ ಅವರ ಖರ್ಚಿನ ದೊಡ್ಡ ಮೊತ್ತವನ್ನು ಉಳಿಸಿ, ಅವರ ಆರ್ಥಿಕ ಸ್ವಾತಂತ್ರ್ಯವನ್ನು ಹೆಚ್ಚಿಸಿದೆ.

ಗ್ಯಾರಂಟಿ ಯೋಜನೆಗಳಿಗೆ ಕಳೆದ ವರ್ಷ ನಾವು 36 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿದ್ದೇವೆ. ಈ ವರ್ಷ ಈ ಯೋಜನೆಗಳಿಗೆ 52 ಸಾವಿರ ಕೋಟಿ ರೂಪಾಯಿ ನಿಗದಿಪಡಿಸಿದ್ದೇವೆ. ಕರ್ನಾಟಕದ ಈ ಯೋಜನೆ ದೇಶಕ್ಕೆ ಮಾದರಿ ಎಂದರೆ ಖಂಡಿತಾ ಅತಿಶಯೋಕ್ತಿಯಾಗಲಾರದು.

ಕಳೆದ ವರ್ಷ ಅನಾವೃಷ್ಟಿಯಿಂದಾಗಿ ನಮ್ಮ ರೈತರು ಸಂಕಷ್ಟ ಎದುರಿಸಬೇಕಾಯಿತು. ಕೇಂದ್ರ ಸರ್ಕಾರ ನೆರವು ನೀಡದಿದ್ದರೂ, ರೈತರ ನೆರವಿಗೆ ನಾವು ಕೈಜೋಡಿಸಿದ್ದೇವೆ. ಬೆಳೆ ನಷ್ಟ ಅನುಭವಿಸಿದ 38,58,737 ರೈತರಿಗೆ ಒಟ್ಟಾರೆಯಾಗಿ 3454.22 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ವಿತರಿಸಲಾಗಿದೆ.

ಪ್ರಸ್ತುತ ಅತಿ ಮಳೆಯಿಂದಾಗಿ ತೊಂದರೆಗೊಳಗಾದ ಜನತೆಯ ನೆರವಿಗೆ ಸರ್ಕಾರ ಧಾವಿಸಿದೆ. ಅತಿವೃಷ್ಟಿಯಿಂದ ಪೂರ್ಣವಾಗಿ ಮನೆ ಕಳೆದುಕೊಂಡವರಿಗೆ 1 ಲಕ್ಷ 20 ಸಾವಿರ ರೂಪಾಯಿ ಪರಿಹಾರ ಒದಗಿಸುವುದರೊಂದಿಗೆ ಮನೆಯನ್ನು ನಿರ್ಮಿಸಿ ಕೊಡಲು ನಾವು ನಿರ್ಧರಿಸಿದ್ದೇವೆ.

ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ಚೇತೋಹಾರಿಯಾಗಿದ್ದರೆ, ಆರ್ಥಿಕ ಅಭಿವೃದ್ಧಿಯೆಡೆಗಿನ ನಮ್ಮ ಕಾರ್ಯಕ್ರಮಗಳು, ಪ್ರಯತ್ನಗಳು ಸ್ಥಿರತೆ ತರುವ ಸಾಧನಗಳಾಗಿವೆ. ನಮ್ಮ ರಾಜ್ಯ ಹೂಡಿಕೆದಾರರ ನೆಚ್ಚಿನ ತಾಣವಾಗಿದ್ದು, 2023-24ನೇ ಸಾಲಿನಲ್ಲಿ 54,427  ಕೋಟಿ ರೂಪಾಯಿ ವಿದೇಶಿ ಬಂಡವಾಳ ಹೂಡಿಕೆ ಆರ್ಕಷಿಸುವುದರೊಂದಿಗೆ ದೇಶದಲ್ಲಿ 3ನೇ ಸ್ಥಾನದಲ್ಲಿದೆ.

ಪ್ರಸ್ತುತ ಸಾಲಿನಲ್ಲಿ ರಾಜ್ಯದಲ್ಲಿ ವಿವಿಧ ಸಂಸ್ಥೆಗಳೊಂದಿಗೆ 42,915 ಕೋಟಿ ರೂಪಾಯಿ ಹೂಡಿಕೆಗೆ 13 ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಇದರಿಂದ ರಾಜ್ಯದಲ್ಲಿ 22,600 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ರಾಜ್ಯದ ವಾಣಿಜ್ಯ ವಹಿವಾಟು ಕ್ಷೇತ್ರ ಅತ್ಯಂತ ಬಲಿಷ್ಠವಾಗಿದೆ. 2023-24ನೇ ಸಾಲಿನಲ್ಲಿ ರಾಜ್ಯವು 1,66,545 ಮಿಲಿಯನ್ ಯುಎಸ್ ಡಾಲರ್ ಮೊತ್ತದ ರಫ್ತು ಮಾಡಿ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ.

ರಾಜ್ಯದ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಈ ಬಾರಿ ಹೆಚ್ಚಿನ ಅನುದಾನ ಒದಗಿಸಲಾಗಿದೆ. ಎತ್ತಿನ ಹೊಳೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಈವರೆಗೆ 855.02 ಕೋಟಿ ರೂಪಾಯಿ,  ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರಡಿ 151.16 ಕೋಟಿ ರೂಪಾಯಿ ವೆಚ್ಚ ಭರಿಸಲಾಗಿದೆ.

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ಪಿ.ಎಂ.ಜಿ.ಎಸ್.ವೈ, ನಮ್ಮ ಗ್ರಾಮ ನಮ್ಮ ರಸ್ತೆ ಮತ್ತು ವಿಶೇಷ ಅಭಿವೃದ್ಧಿ ಯೋಜನೆಗಳಡಿ ಒಟ್ಟು 803 ಕಿಮೀ ಉದ್ದದ ರಸ್ತೆಯನ್ನು 463.11 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ಶೋಷಿತರ ಅಭಿವೃದ್ಧಿ ನಮ್ಮ ಬದ್ಧತೆ. ಸ್ವಾತಂತ್ರ್ಯದ ಫಲವನ್ನು ಸಮಾಜದ ಕಟ್ಟಕಡೆಯ ಪ್ರಜೆಗೂ ತಲುಪಿಸುವುದು ನಮ್ಮ ಕನಸು. ಈ ನಿಟ್ಟಿನಲ್ಲಿ ಸರ್ಕಾರ ಯೋಜನಾಬದ್ಧವಾಗಿ ಹೆಜ್ಜೆ ಇರಿಸುತ್ತಿದೆ.

ದುರ್ಬಲ ಹಾಗೂ ಶೋಷಿತ ಸಮುದಾಯಗಳ ಉಜ್ವಲ ಭವಿಷ್ಯ ನಿರ್ಮಾಣಕ್ಕಾಗಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಸತಿ ಶಾಲೆಗಳು, ಹಾಸ್ಟೆಲುಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ನಮ್ಮ ಗುರಿ ಸ್ಪಷ್ಟವಾಗಿದೆ. ಬುದ್ಧ, ಬಸವಾದಿ ಶರಣರು, ಡಾ.ಬಾಬಾ ಸಾಹೇಬ್ ಅಂಬೇಡ್ಕರ್, ನಾರಾಯಣ ಗುರು, ಸಾವಿತ್ರಿ ಬಾಯಿ ಪುಲೆಯಂತಹ ಮಹಾನರು, ದಾರ್ಶನಿಕರು ತೋರಿಸಿ ಕೊಟ್ಟ ಮಾನವೀಯತೆಯ ಹಾದಿಯಲ್ಲಿ ಮುನ್ನಡೆಯಲು ನಾವು ಪ್ರಯತ್ನಿಸುತ್ತಿದ್ದೇವೆ.

ಪ್ರಜಾಪ್ರಭುತ್ವವನ್ನು ಉಳ್ಳವರ ಆಡುಂಬೊಲವನ್ನಾಗಿಸಲು ನಾವು ಎಂದಿಗೂ ಅವಕಾಶ ಕೊಡುವುದಿಲ್ಲ. ಸಂವಿಧಾನವೇ ನಮಗೆ ಮಾರ್ಗದರ್ಶಕ. ಇಲ್ಲಿ ಎಲ್ಲರೂ ಸಮಾನರು. ಸರ್ವಜನ ಕಲ್ಯಾಣವೇ ಪ್ರಜಾಪ್ರಭುತ್ವದ ಅಂತಿಮ ಗುರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಕಲ್ಯಾಣ ಕಾರ್ಯಕ್ರಮಗಳ ಲಾಭ ದೊರೆಯಬೇಕೆಂಬ ತುಡಿತ ನಮ್ಮ ಸರ್ಕಾರದ ಪ್ರತಿಯೊಂದು ನಡೆಯಲ್ಲೂ ಸ್ಪಷ್ಟವಾಗಿ ಗುರುತಿಸಬಹುದು.

ಸಾಮಾಜಿಕ ಸಮಾನತೆ, ಆರ್ಥಿಕ ಸ್ವಾತಂತ್ರ್ಯ, ಪ್ರತಿಯೊಬ್ಬರಿಗೂ ನೆಮ್ಮದಿಯಿಂದ, ಗೌರವದಿಂದ ಬದುಕುವ ವಾತಾವರಣ ಕಲ್ಪಿಸಲು ನಾವು ಬದ್ಧರಾಗಿದ್ದೇವೆ. ಜನಕಲ್ಯಾಣದ ಬಗ್ಗೆ ನಮ್ಮ ನಿಲುವು, ದಾರಿ ಅತ್ಯಂತ ಸ್ಪಷ್ಟವಾಗಿದೆ.

ಸಾವಿರಾರು ಭಾಷೆಗಳು, ನೂರಾರು ಧರ್ಮಗಳು, ವೈವಿಧ್ಯಮಯ ಆಚಾರ ವಿಚಾರಗಳು, ಸಂಸ್ಕೃತಿ ಮೇಳೈಸಿರುವ ನಮ್ಮ ದೇಶ ಸಮೃದ್ಧ ನಾಗರಿಕತೆಯ ತೊಟ್ಟಿಲು. ಪರಸ್ಪರ ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆಯನ್ನು ನಮಗೆ ಯಾರೂ ಕಲಿಸಿಕೊಡಬೇಕಾದ ಅಗತ್ಯವಿಲ್ಲ. ಇವು ಕೇವಲ ಬಾಯಿಮಾತಿನ ಸವಕಲು ಪದಗಳಲ್ಲ. ಸಾವಿರಾರು ವರ್ಷಗಳಿಂದ ನಾವು ಇದನ್ನು ಪಾಲಿಸಿಕೊಂಡು ಬಂದಿದ್ದೇವೆ.

ಈ ಸಾಮಾಜಿಕ ಮೌಲ್ಯಗಳಿಗೆ ಕುಂದುಂಟು ಮಾಡುವ ಶಕ್ತಿಗಳ ವಿರುದ್ಧ ಸದಾ ಜಾಗೃತರಾಗಿರಬೇಕಾಗಿದೆ. ಸ್ವಾತಂತ್ರ್ಯದ ಈ ಸಂಭ್ರಮದ ಸಂದರ್ಭದಲ್ಲಿ ಪರಸ್ಪರ ಸಾಮರಸ್ಯ, ಸೌಹಾರ್ದವನ್ನು ಇನ್ನಷ್ಟು ಬಲಪಡಿಸುವ, ಆ ಮೂಲಕ ದಾರ್ಶನಿಕರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯುವ ಸಂಕಲ್ಪ ಮಾಡಬೇಕಾಗಿದೆ.

ಸಾವಿರಾರು ಮಹನೀಯರ ಹೋರಾಟ, ತ್ಯಾಗ, ಪರಿಶ್ರಮಗಳ ಫಲವನ್ನು ನಾವು ಇಂದು ಉಣ್ಣುತ್ತಿದ್ದೇವೆ. ಇಂದು ನಮ್ಮ ಕೈಯಲ್ಲಿರುವ ಸ್ವಾತಂತ್ರ್ಯದ ದೀವಿಗೆಯನ್ನು ಮುಂದಿನ ತಲೆಮಾರಿಗೆ ಜತನದಿಂದ ತಲುಪಿಸುವ ಅತ್ಯಂತ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ಈ ಹೊಣೆಗಾರಿಕೆಯನ್ನು ಅರಿತುಕೊಂಡು ನಾವು ಮುನ್ನಡೆಯಬೇಕಿದೆ. ನಾಡಿನ ಸಮಸ್ತರಿಗೂ ಮತ್ತೊಮ್ಮೆ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರುತ್ತೇನೆ. ಜೈ ಹಿಂದ್, ಜೈ ಕರ್ನಾಟಕ” ಎಂದು ಹೇಳಿದ್ದಾರೆ.