ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
July 2024 » Dynamic Leader
October 22, 2024
Home 2024 July
ಉದ್ಯೋಗ

RRB Recruitment 2024: ಭಾರತೀಯ ರೈಲ್ವೇ ನೇಮಕಾತಿ ಮಂಡಳಿಯು ಭಾರತೀಯ ರೈಲ್ವೆಯಲ್ಲಿ ಜೂನಿಯರ್ ಇಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್, ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್, ಕೆಮಿಕಲ್ ಸೂಪರಿಂಟೆಂಡೆಂಟ್ ಮತ್ತು ಮೆಟಲರ್ಜಿಕಲ್ ಸೂಪರಿಂಟೆಂಡೆಂಟ್‌ಗಳ ವಿವಿಧ 7,951 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ವಯಸ್ಸಿನ ಮಿತಿ:
ಭಾರತೀಯ ರೈಲ್ವೆಯಲ್ಲಿನ ಈ ಹುದ್ದೆಗಳಿಗೆ 01.01.2025 ರಂತೆ ಕನಿಷ್ಠ 18 ವರ್ಷದಿಂದ ಗರಿಷ್ಠ 36 ವರ್ಷಗಳು ಆಗಿರಬೇಕು. ಅಲ್ಲದೆ, ಅಭ್ಯರ್ಥಿಗಳು 01.01.2007ರ ನಂತರ ಜನಿಸಿರಬೇಕು. ಅದೇ ರೀತಿ, ಸಾಮಾನ್ಯ ವರ್ಗವು 02.01.1989ರ ನಂತರ ಹುಟ್ಟಿರಬಾರದು. OBC ವರ್ಗವು 02.01.1986ರ ನಂತರ ಹುಟ್ಟಿರಬಾರದು. SC/ST ವರ್ಗದವರು 02.01.1984ರ ನಂತರ ಹುಟ್ಟಿರಬಾರದು.

ಹೆಚ್ಚುವರಿಯಾಗಿ SC/ST ವರ್ಗಕ್ಕೆ 5 ವರ್ಷಗಳು, OBC ವರ್ಗಕ್ಕೆ 3 ವರ್ಷಗಳು ಮತ್ತು ವಿಕಲಚೇತನರಿಗೆ 10 ರಿಂದ 15 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಸಂಬಳದ ವಿವರಗಳು:
ಭಾರತೀಯ ರೈಲ್ವೆಯಲ್ಲಿ ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಪ್ರಕಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಕೆಮಿಕಲ್ ಮತ್ತು ಮೆಟಲರ್ಜಿಕಲ್ ಸೂಪರಿಂಟೆಂಡೆಂಟ್ / ಸಂಶೋಧಕ ಹುದ್ದೆಗಳಿಗೆ ಹಂತ 7ರ ಪ್ರಕಾರ ಕನಿಷ್ಠ ರೂ.44,900 ರಿಂದ ಗರಿಷ್ಠ ರೂ.1,42,400 ವರೆಗೆ ಮಾಸಿಕ ವೇತನವನ್ನು ಪಾವತಿಸಲಾಗುತ್ತದೆ.

ಜೂನಿಯರ್ ಇಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್, ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಹಂತ 6ರ ಪ್ರಕಾರ ಕನಿಷ್ಠ ರೂ.35,400 ರಿಂದ ಗರಿಷ್ಠ ರೂ.1,12,400 ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ:
ಭಾರತೀಯ ರೈಲ್ವೆಯಲ್ಲಿ, ಎಲೆಕ್ಟ್ರಿಕಲ್, ಡಿಸೈನ್, ಮೆಕ್ಯಾನಿಕಲ್, ಸಿವಿಲ್, ಟೆಲಿಕಮ್ಯುನಿಕೇಶನ್ ಮತ್ತು ಡೀಸೆಲ್ ಮೆಕ್ಯಾನಿಕಲ್‌ನಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ / ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ಸ್ / ಉತ್ಪಾದನೆ / ಮೆಕಾಟ್ರಾನಿಕ್ಸ್ / ಇಂಡಸ್ಟ್ರಿಯಲ್ / ಮೆಷಿನಿಂಗ್ / ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ / ಇನ್‌ಸ್ಟ್ರುಮೆಂಟ್ಸ್ ಮತ್ತು ಮೆಷಿನರಿ / ಟೂಲ್ಸ್ ಮತ್ತು ಡೈ ಮೇಕಿಂಗ್ / ಆಟೋಮೊಬೈಲ್ / ಪ್ರೊಡಕ್ಷನ್ ಇಂಜಿನಿಯರಿಂಗ್ / ಸಿವಿಲ್ ಎಂಜಿನಿಯರಿಂಗ್ ವಿಭಾಗಗಳಲ್ಲಿ 3 ವರ್ಷಗಳ ಡಿಪ್ಲೊಮಾ ಅಥವಾ B.E/B.Tech ಪದವಿ ಪಡೆದಿರಬೇಕು.

ಕೆಮಿಕಲ್ ಸೂಪರ್‌ವೈಸರ್ / ರಿಸರ್ಚ್ ಹುದ್ದೆಗಳಿಗೆ ಕೆಮಿಕಲ್ ಟೆಕ್ನಾಲಜಿಯಲ್ಲಿ ಪದವಿ ಪಡೆದಿರಬೇಕು. ಅಥವಾ ತತ್ಸಮಾನ ವರ್ಗದಲ್ಲಿ ಪದವಿ ಹೊಂದಿರಬೇಕು.

ಮೆಟಲರ್ಜಿಕಲ್ ಸೂಪರಿಂಟೆಂಡೆಂಟ್ / ಸಂಶೋಧನಾ ಹುದ್ದೆಗಳಿಗೆ ಮೆಟಲರ್ಜಿಕಲ್ ಇಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿರಬೇಕು.

ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ ಹುದ್ದೆಗೆ ಫಿಸಿಕ್ಸ್ / ಕೆಮಿಸ್ಟ್ರಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಹುದ್ದೆಗೆ ನೀವು ಯಾವುದೇ ಎಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ಆಯ್ಕೆಯ ವಿಧಾನ:
ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ 7,951 ಹುದ್ದೆಗಳಿಗೆ ನಾಲ್ಕು ಹಂತದ ನೇಮಕಾತಿ ಪ್ರಕ್ರಿಯೆಯನ್ನು ಅನುಸರಿಸಲಾಗುವುದು.

ಎರಡು ಹಂತದ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ ಇರುತ್ತದೆ. ಮೊದಲ ಹಂತದಲ್ಲಿ ಅರ್ಹತೆ ಪಡೆದರೆ ಎರಡನೇ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ಬರೆಯಬೇಕು.

ಅದರಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣಪತ್ರ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ವೆಬ್‌ಸೈಟ್ www.rrbchennai.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29.08.2024

ಆನ್‌ಲೈನ್ ತಿದ್ದುಪಡಿಗಾಗಿ: 30.08.2024 – 08.09.2024

ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯ ದಿನಾಂಕ: ನಂತರ ಪ್ರಕಟಿಸಲಾಗುವುದು.

ಅರ್ಜಿ ಶುಲ್ಕ:
ಭಾರತೀಯ ರೈಲ್ವೆ ಇಂಜಿನಿಯರಿಂಗ್ ಹುದ್ದೆಗಳಿಗೆ ರೂ.500 ಮತ್ತು ಎಸ್‌ಸಿ/ಎಸ್‌ಟಿ/ಮಹಿಳೆ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ರೂ.250 ನಿಗದಿಪಡಿಸಲಾಗಿದೆ.

ದೇಶ ರಾಜಕೀಯ

 ಡಿ.ಸಿ.ಪ್ರಕಾಶ್

ಬಿಹಾರದಲ್ಲಿ, 2022 ರ ದ್ವಿತೀಯಾರ್ಧದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ನಿತೀಶ್ ಕುಮಾರ್, ಆರ್‌ಜೆಡಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅದೇ ವರ್ಷದ ಅಕ್ಟೋಬರ್‌ನಲ್ಲಿ ರಾಜ್ಯ ಮಟ್ಟದ ಜಾತಿವಾರು ಸಮೀಕ್ಷೆಯನ್ನು ಬಿಡುಗಡೆ ಮಾಡಿದರು.

ಜೊತೆಗೆ, ರಾಜ್ಯ ಸರ್ಕಾರಿ ಮೀಸಲಾತಿಯನ್ನು ಶೇ.65ಕ್ಕೆ ಹೆಚ್ಚಿಸುವುದಾಗಿಯೂ ಭರವಸೆ ನೀಡಿದರು. ಅಂದಿನಿಂದ, ಕಾಂಗ್ರೆಸ್ ಸೇರಿದಂತೆ ‘ಇಂಡಿಯಾ ಮೈತ್ರಿಕೂಟ’ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ಜಾತಿವಾರು ಜನಗಣತಿ ನಡೆಸುವಂತೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿವೆ.

ಆದರೆ, ಈ ಬಗ್ಗೆ ಮೌನ ವಹಿಸಿದ್ದ ಬಿಜೆಪಿ ಸರ್ಕಾರ ಲೋಕಸಭೆ ಚುನಾವಣೆಯಲ್ಲಿ ಎಸ್.ಸಿ, ಎಸ್.ಟಿ ಮೀಸಲಾತಿಯನ್ನು ಕಸಿಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಪ್ರಚಾರ ಮಾಡಿತ್ತು. ಜಾತಿವಾರು ಗಣತಿಯನ್ನು ಬೆಂಬಲಿಸುವ ನಿತೀಶ್ ಕುಮಾರ್ ಮತ್ತು ಇತರರ ಬೆಂಬಲದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರವೂ ಬಿಜೆಪಿ ಈ ವಿಷಯದಲ್ಲಿ ಮೌನವಾಗಿದೆ.

ಆದರೂ, ಸರ್ಕಾರದ ಎಲ್ಲಾ ಯೋಜನೆಗಳು ಹಿಂದುಳಿದ, ಪರಿಶಿಷ್ಟ ಮತ್ತು ಬುಡಕಟ್ಟು ಜನರಿಗೆ ಸರಿಯಾಗಿ ಸಿಗುವಂತೆ ಮಾಡಲು ರಾಷ್ಟ್ರಮಟ್ಟದಲ್ಲಿ ಜಾತಿವಾರು ಜನಗಣತಿ ನಡೆಸಬೇಕು ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಈ ಹಿನ್ನೆಲೆಯಲ್ಲಿ, 2024-25ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಕಳೆದ ವಾರ ಮಂಡಿಸಲಾಗಿತ್ತು. ಈ ಕುರಿತು ಲೋಕಸಭೆಯಲ್ಲಿ ಸೋಮವಾರ (ಜುಲೈ 29) ರಂದು ದಿನ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಕೇಂದ್ರ ಬಜೆಟ್‌ ತಯಾರಿಸುವಲ್ಲಿ 20 ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಆದರೆ ಹಿಂದುಳಿದ, ಪರಿಶಿಷ್ಟ ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ ಒಬ್ಬ ವ್ಯಕ್ತಿಯನ್ನೂ ಅದರಲ್ಲಿ ಸೇರಿಸಲಾಗಿಲ್ಲ.

ದೇಶದ ಶೇ.73ರಷ್ಟು ಜನಸಂಖ್ಯೆ ಹೊಂದಿರುವ ಈ ಮೂರು ಸಮುದಾಯಗಳಿಗೆ ಬಜೆಟ್ ನಲ್ಲಿ ಏನೂ ಸಿಗಲಿಲ್ಲ. ಇಂದಿನ ಭಾರತದಲ್ಲಿ ಕಮಲ ಆಕಾರದ ಚಕ್ರವ್ಯೂಹ ಇದೆ. ಯುವಕರು, ರೈತರು, ಮಹಿಳೆಯರು, ಸಣ್ಣ ಮತ್ತು ಮಧ್ಯಮ ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಇದನ್ನು ಮೋದಿ, ಅಮಿತ್ ಶಾ, ಮೋಹನ್ ಭಾಗವತ್, ಅಜಿತ್ ದೋವಲ್, ಅಂಬಾನಿ ಮತ್ತು ಅದಾನಿ ಮುಂತಾದ ಆರು ಜನರು ನಿಯಂತ್ರಿಸುತ್ತಾರೆ” ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ, ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಸಂಸದ ಅನುರಾಗ್ ಠಾಕೂರ್ ಅವರು ರಾಹುಲ್ ಗಾಂಧಿ ವಿರುದ್ಧ ಜಾತಿ, ಧರ್ಮದ ಆಧಾರದಲ್ಲಿ ಪರೋಕ್ಷ ವಾಗ್ದಾಳಿ ನಡೆಸಿದ್ದು, ಪ್ರಧಾನಿ ಮೋದಿ ಇದನ್ನು ಹೊಗಳಿದ್ದು ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

ನಿನ್ನೆ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣಕ್ಕೆ ಪ್ರತಿಕ್ರಿಯಿಸಿದ ಅನುರಾಗ್ ಠಾಕೂರ್, “ತನ್ನ ಜಾತಿ ಗೊತ್ತಿಲ್ಲದ ವ್ಯಕ್ತಿ ಜಾತಿವಾರು ಗಣತಿ ಬಗ್ಗೆ ಮಾತನಾಡುತ್ತಿದ್ದಾರೆ. ಅಲ್ಲದೆ, ಕೆಲವರು ಆಕಸ್ಮಿಕವಾಗಿ ಹಿಂದೂಗಳಾಗಿದ್ದಾರೆ. ಆದ್ದರಿಂದ, ಮಹಾಭಾರತದ ಬಗ್ಗೆ ಅವರ ಜ್ಞಾನವು ಹಾಗೆ ಆಗಿರುತ್ತದೆ” ಎಂದು ವಾಗ್ದಾಳಿ ನಡೆಸಿದರು.

ಅನುರಾಗ್ ಠಾಕೂರ್

ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, “ಆದಿವಾಸಿ, ದಲಿತ ಮತ್ತು ಹಿಂದುಳಿದವರ ಸಮಸ್ಯೆಗಳನ್ನು ಯಾರೇ ಎತ್ತಿದರೂ ಅವರನ್ನು ನಿಂದಿಸಲಾಗುತ್ತದೆ. ಆದಾಗ್ಯೂ, ನಾನು ಇದನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ಅನುರಾಗ್ ಠಾಕೂರ್ ನನ್ನನ್ನು ನಿಂದಿಸಿ ಅವಮಾನ ಮಾಡಿದ್ದಾರೆ.

ಆದರೆ, ನಾನು ಅವರಿಂದ ಯಾವುದೇ ಕ್ಷಮೆಯನ್ನು ಬಯಸುವುದಿಲ್ಲ. ನೀವು ನನ್ನನ್ನು ಎಷ್ಟು ಬೇಕಾದರೂ ಅವಮಾನಿಸಬಹುದು. ಸಂಸತ್ತಿನಲ್ಲಿ ಜಾತಿವಾರು ಜನಗಣತಿಯನ್ನು ನಾವು ಅಂಗೀಕರಿಸುತ್ತೇವೆ” ಎಂದರು. ಮತ್ತೊಂದೆಡೆ, ಸಮಾಜವಾದಿ ನಾಯಕ ಅಖಿಲೇಶ್ ಯಾದವ್, “ಅದು ಹೇಗೆ ಒಬ್ಬರ ಜಾತಿಯನ್ನು ಕೇಳುವುದು?” ಎಂದು ಅನುರಾಗ್ ಠಾಕೂರ್ ಅವರನ್ನು ಪ್ರಶ್ನಿಸಿದರು.

ಅಲ್ಲದೆ, ಅನೇಕ ವಿರೋಧ ಪಕ್ಷದ ಸಂಸದರು ಸಹ ಅನುರಾಗ್ ಠಾಕೂರ್ ಅವರ ಇಂತಹ ಭಾಷಣವನ್ನು ವಿರೋಧಿಸಿದರು. ಆದರೆ, ಸದನದಲ್ಲಿ ನಡೆದ ಈ ಘಟನೆಗೆ ಇನ್ನಷ್ಟು ತುಪ್ಪ ಸುರಿಯುವ ಸಲುವಾಗಿ ಪ್ರಧಾನಿ ಮೋದಿ, ನನ್ನ ಯುವ ಮತ್ತು ಶಕ್ತಿಯುತ ಸಹೋದ್ಯೋಗಿ ಅನುರಾಗ್ ಠಾಕೂರ್ ಅವರ ಈ ಭಾಷಣ, ಕೇಳಲೇಬೇಕು. ಸತ್ಯ ಮತ್ತು ಹಾಸ್ಯದ ಈ ಪರಿಪೂರ್ಣ ಮಿಶ್ರಣವು ಇಂಡಿಯಾ ಮೈತ್ರಿಕೂಟದ ಕೊಳಕು ರಾಜಕೀಯವನ್ನು ಬಹಿರಂಗಪಡಿಸುತ್ತದೆ” ಎಂದು ಟ್ವೀಟ್ ಮಾಡಿ, ಅನುರಾಗ್ ಠಾಕೂರ್ ಅವರು ಸದನದಲ್ಲಿ ಮಾಡಿದ ಭಾಷಣದ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ಪುಟ X ನಲ್ಲಿ ಹಂಚಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ಅನುರಾಗ್ ಠಾಕೂರ್ ಅವರು ಅಖಿಲೇಶ್ ಯಾದವ್ ಅವರ ಹಳೆಯ ವಿಡಿಯೋವನ್ನು ಕಟ್ ಮಾಡಿ, “ನೀವು ಜಾತಿಯ ಬಗ್ಗೆ ಅದು ಹೇಗೆ ಕೇಳಬಹುದು ಅಖಿಲೇಶ್ ಯಾದವ್?” ಎಂದು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.

ಮತ್ತೊಂದೆಡೆ, ಕಮ್ಯುನಿಸ್ಟ್ ಪಕ್ಷದ ಸಂಸದ ಸಿ.ವೆಂಕಟೇಶನ್ ಅವರು ತಮ್ಮ ಎಕ್ಸ್ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ, “ನಿನ್ನೆ ಸಂಸತ್ತಿನಲ್ಲಿ, ‘ತನ್ನ ಜಾತಿ ಗೊತ್ತಿಲ್ಲದ ವ್ಯಕ್ತಿ ಜಾತಿವಾರು ಗಣತಿ ಬಗ್ಗೆ ಮಾತನಾಡಬಹುದಾ?’ ಎಂದು ರಾಹುಲ್ ಗಾಂಧಿ ಬಗ್ಗೆ ಅನುರಾಗ್ ಠಾಕೂರ್ ಮಾತನಾಡಿದರು.

ಈ ಭಾಷಣವನ್ನು ಎಲ್ಲರೂ ಕೇಳಲೇಬೇಕಾದ ಅತ್ಯುತ್ತಮ ಭಾಷಣ ಎಂದು ಪ್ರಧಾನಿ ತಮ್ಮ ‘ಎಕ್ಸ್’ ಸೈಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ದೇಶದ ಅತ್ಯುನ್ನತ ಸದನಗಳಲ್ಲಿ ಬಿಜೆಪಿಯ ಧ್ವನಿ ಎಷ್ಟು ನೋವಿನಿಂದ ಹೊರಹೊಮ್ಮುತ್ತಿದೆ ಎಂಬುದನ್ನು ನೋಡಿ” ಎಂದು ಟೀಕಿಸಿದ್ದಾರೆ. ಅವರನ್ನು ಅನುಸರಿಸಿ ಹಲವು ವಿರೋಧ ಪಕ್ಷಗಳ ನಾಯಕರು, ಅನುರಾಗ್ ಠಾಕೂರ್ ಅವರ ಕ್ರಮವನ್ನು ಖಂಡಿಸುತ್ತಾ, ಮೋದಿಯವರ ಹೊಗಳಿಕೆಯನ್ನು ಟೀಕಿಸುತ್ತಿದ್ದಾರೆ.

ಅಲ್ಲದೆ, ಅನುರಾಗ್ ಠಾಕೂರ್ ಅವರ ವೀಡಿಯೊವನ್ನು ವೀಕ್ಷಿಸಲು ಮೋದಿಯವರ ಮನವಿಗೆ ವಿರುದ್ಧವಾಗಿ ಕಾಂಗ್ರೆಸ್ ಪಕ್ಷವು, ಇದು ಸಂಸತ್ತಿನ ವಿಶೇಷ ಹಕ್ಕುಗಳ ಉಲ್ಲಂಘನೆ ಮತ್ತು ಅಸಂವಿಧಾನಿಕ ಎಂದು ಲೋಕಸಭೆಯ ರೂಲ್ ಬುಕ್ ಚಾಪ್ಟರ್ 20ರ ರೂಲ್ ನಂಬರ್ 222ರ ಪ್ರಕಾರ ಮೋದಿಯವರ ವಿರುದ್ಧ ಹಕ್ಕುಚ್ಯುತಿ (Privilege Motion Notice) ಮಂಡಿಸಿದೆ.

ದೇಶ

ಕೇರಳದ ವಯನಾಡು ಜಿಲ್ಲೆಯಲ್ಲಿ ಉಂಟಾಗಿರುವ ಭೂಕುಸಿತಕ್ಕೆ ತಾಪಮಾನವೇ ಪ್ರಮುಖ ಕಾರಣ ಎಂಬ ಅಂಶ ಬಯಲಾಗಿದೆ!

“ಅರಬ್ಬೀ ಸಮುದ್ರದ ತಾಪಮಾನದಿಂದ ದಟ್ಟವಾದ ಮೋಡಗಳು ನಿರ್ಮಾಣಗೊಂಡು ಅಲ್ಪಾವಧಿಯಲ್ಲಿಯೇ ಭಾರಿ ಮಳೆಯಾಗಲು ಕಾರಣವಾಯಿತು” ಎಂದು ಋತುಮಾನಗಳ ಕುರಿತು ಅಧ್ಯಯನ ನಡೆಸುತ್ತಿರುವ ಹಿರಿಯ ವಿಜ್ಞಾನಿ ಅಭಿಲೇಶ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಾಯುಮಂಡಲದ ರಾಡಾರ್ ಸಂಶೋಧನಾ ಕೇಂದ್ರದ ನಿರ್ದೇಶಕ ಅಭಿಲೇಶ್, “ಇಡೀ ಕೊಂಕಣ ಪ್ರದೇಶದಲ್ಲಿ ಕಳೆದ ಎರಡು ವಾರಗಳಿಂದ ಮುಂಗಾರು ಮಳೆ ಚುರುಕುಗೊಂಡಿರುವುದೇ ಭೂಕುಸಿತಕ್ಕೆ ಕಾರಣ.

ಈ ಕಾರಣದಿಂದಾಗಿ ಕಾಸರಗೋಡು, ಕಣ್ಣೂರು, ವಯನಾಡು, ಕೋಳಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ.

ಎರಡು ವಾರಗಳಿಂದ ಬೀಳುತ್ತಿರುವ ಮಳೆಯಿಂದಾಗಿ ಮಣ್ಣು ತುಂಬಾ ತೇವವಾಗಿತ್ತು. ಈ ಹಿನ್ನೆಲೆಯಲ್ಲಿ, ಅತಿಯಾದ ಕಪ್ಪು ಮೋಡಗಳು ಅರೇಬ್ಬೀ ಸಮುದ್ರದ ಕರಾವಳಿ ಪ್ರದೇಶಗಳಲ್ಲಿ ಸುತ್ತುವರಿದು, ಭಾರೀ ಮಳೆಯಾದ ಕಾರಣ, ಸಡಿಲವಾದ ಮಣ್ಣು ದುರ್ಬಲಗೊಂಡು ಭೂಕುಸಿತ ಸಂಭವಿಸಿದೆ.

ಅಂದರೆ, 2019 ರಲ್ಲಿ ಕೇರಳದಲ್ಲಿ ಪ್ರವಾಹ ಬಂದಾಗ ಮೋಡಗಳು ಎಷ್ಟು ದಟ್ಟವಾಗಿತ್ತೋ ಅದೇ ಮಟ್ಟಿಗೆ ಈಗಲೂ ಮೋಡಗಳು ದಟ್ಟವಾಗಿ ಸುತ್ತುವರಿದಿದೆ. ಇದಲ್ಲದೆ, ಆಗ್ನೇಯ ಅರಬ್ಬೀ ಸಮುದ್ರದ ಪ್ರದೇಶದಲ್ಲಿ ಏರಿಕೆಯಾಗುತ್ತಿರುವ ತಾಪಮಾನದಿಂದ ಅಲ್ಲೊಂದು ವಾಯುಮಂಡಲ ನಿರ್ಮಾಣವಾಗಿತ್ತು. ಇದಕ್ಕೂ ಹವಾಮಾನದ ತಾಪಮಾನಕ್ಕೂ ಸಂಬಂಧ ಇದೆ” ಎಂದು ಹೇಳಿದ್ದಾರೆ.

ವಿದೇಶ

ಟೆಹ್ರಾನ್: ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಮುಂದುವರಿದಿದ್ದು, ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಅವರ ಮನೆಯ ಮೇಲೆ ಇಸ್ರೇಲ್ ಪಡೆಗಳು ನಡೆಸಿದ ದಾಳಿಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇಸ್ಮಾಯಿಲ್ ಕೊಂದವರು ಯಾರು? ಘಟನೆ ನಡೆದಿದ್ದು ಹೇಗೆ? ಇನ್ನೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಇಸ್ರೇಲ್ ಮತ್ತು ಹಮಾಸ್ ನಡುವೆ ತಿಂಗಳುಗಳ ಕಾಲ ಯುದ್ಧ ನಡೆಯುತ್ತಿದೆ. ಇಲ್ಲಿಯವರೆಗೆ ಸಾವನ್ನಪ್ಪಿದ ಪ್ಯಾಲೆಸ್ತೀನಿಯರ ಸಂಖ್ಯೆ 39 ಸಾವಿರ ಮೀರಿದೆ. 90 ಸಾವಿರದ 589ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಇಸ್ರೇಲಿ ಪಡೆಗಳು ಹಮಾಸ್ ಮೇಲೆ ತಮ್ಮ ದಾಳಿಯನ್ನು ತೀವ್ರಗೊಳಿಸುತ್ತಲೇ ಇವೆ. ಇಸ್ರೇಲ್ ಭಾಗದಲ್ಲಿ 1,200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಈ ಹಿನ್ನೆಲೆಯಲ್ಲಿ, ಹಮಾಸ್‌ನ ಪ್ರಮುಖ ನಾಯಕ ಇಸ್ಮಾಯಿಲ್ ಹನಿಯೆಹ್ ಅವರನ್ನು ಇರಾನ್‌ನಲ್ಲಿ ಹತ್ಯೆಮಾಡಲಾಗಿದೆ. ಇಸ್ಮಾಯಿಲ್ ಜೊತೆಗೆ ಆತನ ಸಹಾಯಕ ಕೂಡ ಸಾವನ್ನಪ್ಪಿದ್ದಾರೆ. ಇರಾನ್‌ನ ನೂತನ ಅಧ್ಯಕ್ಷರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ಬಂದಾಗ ಟೆಹ್ರಾನ್‌ನಲ್ಲಿ ಅವರು ತಂಗಿದ್ದ ಮನೆಯನ್ನು ಇಸ್ರೇಲ್ ಪಡೆಗಳು ಗುರಿಯಾಗಿಸಿದ್ದವು. ಈ ವೇಳೆ ಅವರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಗಳಾಗಿವೆ.

ಇರಾನ್‌ನ ಇಸ್ಲಾಮಿಕ್ ಕ್ರಾಂತಿಕಾರಿ ರಕ್ಷಣಾ ಪಡೆ ಈ ಮಾಹಿತಿಯನ್ನು ಖಚಿತಪಡಿಸಿದೆ ಎಂದು ಇರಾನ್ ದೇಶದ ಮಾಧ್ಯಮಗಳು ವರದಿ ಮಾಡಿದೆ. ಇದರಿಂದಾಗಿ ಭಾರೀ ಉದ್ವಿಗ್ನ ಸ್ಥಿತಿ ಉಂಟಾಗಿದೆ.

ರಾಜ್ಯ

ಬೆಂಗಳೂರು: ರಾಜ್ಯದ ಒಳಗೆ ಮತ್ತು ನೆರೆಯ ರಾಜ್ಯಗಳಲ್ಲಿಯೂ ಅತಿಯಾದ ಮಳೆ ಸುರಿಯುತ್ತಿದ್ದು, ರಾಜ್ಯದ ಯಾವುದೇ ಮೂಲೆಯಲ್ಲಿ ಸಮಸ್ಯೆ ತಲೆದೋರಿದರೂ ಅದನ್ನು ಎದುರಿಸಲು ಸಕಲ ತಯಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನೂ ನೀಡಲಾಗಿದೆ. ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಸಿದ್ಧರಿರುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಬಗ್ಗೆ ಜಿಲ್ಲಾಧಿಕಾರಿಗಳು ಎಚ್ಚರವಹಿಸಬೇಕು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ್ದೇನೆ ಎಂದಿದ್ದಾರೆ.

ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡುವಂತೆಯೂ ಸೂಚಿಸಿದ್ದಾರೆ.

ದೇಶ ರಾಜಕೀಯ

ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮದುವೆ ಮೂಲಕ ಮತಾಂತರ ಮಾಡಲಾಗುತ್ತಿದೆ ಎಂದು ಬಿಜೆಪಿ ಹಲವು ವರ್ಷಗಳಿಂದ ಆರೋಪಿಸುತ್ತಲೇ ಬರುತ್ತಿವೆ. ಇದೇ ವೇಳೆ ಬಿಜೆಪಿ ಆಡಳಿತಾರೂಢ ಉತ್ತರಪ್ರದೇಶದಲ್ಲಿ ಯೋಗಿ ಸರಕಾರವು ಲವ್ ಜಿಹಾದ್ ವಿರುದ್ಧ 2021ರಲ್ಲಿ ಕಾನೂನನ್ನು ಜಾರಿಗೊಳಿಸಿತು.

ಈ ಕಾನೂನಿನ ಪ್ರಕಾರ, ಉದ್ದೇಶಪೂರ್ವಕವಾಗಿ ಯಾರನ್ನಾದರೂ ಪ್ರೀತಿಸಿ, ನಂತರ ಬಲವಂತವಾಗಿ ಮತಾಂತರಗೊಳಿಸಿ ಮದುವೆಯಾದರೆ, ಆ ಮದುವೆ ಅನೂರ್ಜಿತ ಎಂದು ಹಾಗೆ ಮದುವೆಯಾಗುವ ವ್ಯಕ್ತಿಯನ್ನು ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಬಂಧಿಸಿ, 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿಗಳವರೆಗೆ ದಂಡ ವಿಧಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ, ಲವ್ ಜಿಹಾದ್ ಕಾಯ್ದೆಗೆ ತಿದ್ದುಪಡಿ ತರಲು ಉತ್ತರ ಪ್ರದೇಶ ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ‘ಉತ್ತರ ಪ್ರದೇಶ ಮತಾಂತರ ನಿಷೇಧ ಕಾಯ್ದೆ 2024’ ಎಂದು ಪ್ರಸ್ತಾಪಿಸಲಾಗುವ ಈ ತಿದ್ದುಪಡಿ ಕಾಯ್ದೆಯನ್ನು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಖನ್ನಾ ಇಂದು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮಂಡಿಸಿದರು.

ಹೊಸ ತಿದ್ದುಪಡಿಯು 10 ವರ್ಷಗಳ ಜೈಲು ಶಿಕ್ಷೆಯನ್ನು 20 ವರ್ಷಗಳಿಗೆ ಹೆಚ್ಚಿಸಲಿದೆ. ದಂಡದ ಮೊತ್ತವನ್ನು 50 ಸಾವಿರದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಲವ್ ಜಿಹಾದ್ ಪ್ರಕರಣದಲ್ಲಿ ಸಂತ್ರಸ್ತೆ ಮತ್ತು ಆಕೆಯ ಪೋಷಕರು ಹಾಗೂ ಒಡಹುಟ್ಟಿದವರು ದೂರು ನೀಡಿದರೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿತ್ತು. ಈಗ ಆ ಮಿತಿ ಸಡಿಲಿಸಲಾಗಿದ್ದು, ತಿದ್ದುಪಡಿ ಪ್ರಕಾರ ಯಾರೇ ದೂರು ನೀಡಿದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಲಾಗಿದೆ.

ರಾಜಕೀಯ

ಬೆಂಗಳೂರು: ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕಾರಣಕ್ಕೆ ಸಂಬಂಧಿಸಿದಂತೆ ಮೊದಲನೇ ಆರೋಪಿ ರಾಮಚಂದ್ರಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ಮೂರನೇ ಆರೋಪಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಪ್ರಕರಣದಲ್ಲಿ, ‘ಮೇಲ್ಮನವಿ ಮಾಡಲು ಇದು ಅರ್ಹ ಪ್ರಕರಣವಲ್ಲ’ ಎಂದಿರುವ ಸರ್ಕಾರದ ನಡೆಗೆ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಅಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದು ಕಾನೂನಿನ ಕುಣಿಕೆಯಿಂದ ಕೋಮುವಾದಿಗಳಿಗೆ ಪಾರಾಗಲು ಸರ್ಕಾರ ಅವಕಾಶ ನೀಡುವುದಲ್ಲದೆ ಇನ್ನೇನು? ಸರ್ಕಾರ ಯಾರ ಹಿತವನ್ನು ಕಾಪಾಡುತ್ತಿದೆ ಎಂದು ಅರ್ಥೈಸಲು ಬೇರೆ ಕಾರಣ ಬೇಕಿಲ್ಲ. ಸರ್ಕಾರದ ಇಂತಹ ಧೋರಣೆಗಳಿಂದ ಕೋಮುವಾದಿ ಶಕ್ತಿಗಳಿಗೆ ಇನ್ನಷ್ಟು ಧ್ಯರ್ಯ ಬಂದಂತಾಗಿದೆ.

ಪುನೀತ್ ಕೆರೆಹಳ್ಳಿಯಂತಹ ಸಮಾಜ ಘಾತುಕರು ಕಾನೂನನ್ನು ಕೈಗೆತ್ತಿಕೊಳ್ಳಲು ಸರ್ಕಾರದ ಇಂತಹ ನಿರ್ಧಾರಗಳೇ ಕಾರಣ. ಸರ್ಕಾರ ಇಂತಹವರ ಮೇಲೆ ಯಾಕೆ ಮಮಕಾರ ತೋರಿಸುತ್ತಿದೆ. ಕಾನೂನಿಗೆ ಸವಾಲು ಹಾಕುತ್ತಿರುವ ಪುನೀತ್ ಕೆರೆಹಳ್ಳಿ ಮೆರೆಯಲು ಕಾಂಗ್ರೆಸ್ ಸರ್ಕಾರ ಯಾಕೆ ಅವಕಾಶ ಮಾಡಿಕೊಡುತ್ತಿದೆ” ಎಂದು ಅವರು ಸರಕಾರವನ್ನು ಪ್ರಶ್ನಿಸಿದ್ದಾರೆ.

ಅತನನ್ನು ನಿಯಂತ್ರಿಸಲು ಸರ್ಕಾರ ಆತಂಕ ಪಡುತ್ತಿದೆಯೇ? ಕಾಂಗ್ರೆಸ್ ಕೋಮುವಾದಿಗಳಿಗೆ ಹಿತಕಾರಿಯಾಗಿ ವರ್ತಿಸುತ್ತಿದೆ. ಕಳೆದ ಬಾರಿಯ ಬಿಜೆಪಿ ಸರ್ಕಾರದ ಕೋಮು ಧ್ರುವೀಕರಣದಿಂದ ಬೇಸತ್ತ ಜನರು ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿದರು. ಕಾಂಗ್ರೆಸ್ ಸರ್ಕಾರ ಬಂದರೆ ಕೋಮುವಾದಿಗಳ ಸದ್ದಡಗುವುದು ಎಂದು ಭಾವಿಸಿದ್ದರು. ಆದರೆ, ಸರ್ಕಾರದ ಈಗಿನ ನಡೆ ನೋಡಿದರೆ ಅದು ಕೇವಲ ಭ್ರಮೆ ಎಂದೆನಿಸುತ್ತದೆ.

ಯಾಕೆಂದರೆ, ಒಂದೆಡೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಸರ್ಕಾರಕ್ಕೆ ಕವಡೆ ಕಾಸಿನ ಬೆಲೆಯನ್ನೂ ನೀಡುತ್ತಿಲ್ಲ. ಆತ ಅನಾರೋಗ್ಯದ ನೆಪದಲ್ಲಿ ಆಸ್ಪತ್ರೆ ಸೇರಿ ಪಾರಾಗುತ್ತಾನೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಡುತ್ತಿರುವುದೇಕೆ? ಈ ಪ್ರಕರಣಗಳನ್ನು ಗಮನಿಸಿದರೆ ಸರ್ಕಾರ ಯಾರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ಅರ್ಥವಾಗುತ್ತದೆ. ತಮ್ಮನ್ನು ಚುನಾಯಿಸಿದ ಮತದಾರರಿಗೆ ದ್ರೋಹ ಬಗೆಯದೆ ಸರ್ಕಾರ ತನ್ನ ಕರ್ತವ್ಯ ನಿರ್ವಹಿಸಲು ಮುಂದಾಗಬೇಕೆಂದು ತಾಹೇರ್ ಹುಸೇನ್ ಸರ್ಕಾರವನ್ನು ಆಗ್ರಹಿಸಿದ್ದಾರೆ.

ರಾಜಕೀಯ

ಬೆಂಗಳೂರು: ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ ಸಿದ್ದರಾಮಯ್ಯ ನವರೇ.. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮೂಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ, ಇದರಲ್ಲಿ ‘ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ?’ ‘ಸುಳ್ಳು ಸಂಶೋಧಕ ಸಿದ್ದರಾಮಯ್ಯ’ನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ, ಇನ್ನಿತರರ ಮೇಲೆ ಸಿಡಿಸಲು ಹೊರಟು ಲಜ್ಜೆಗೇಡಿತನದ ಪರಮಾವಧಿ ಮೆರೆದಿದ್ದೀರಿ ಎಂದು ಕಿಡಿಕಾರಿದ್ದಾರೆ.

‘ಮೂಡಾ ಭೂಮಿಯನ್ನು ಮುಖ್ಯಮಂತ್ರಿ ಕುಟುಂಬ ಮುಕ್ಕಿ ತಿಂದಿದೆ’ ಎಂದು ಇಡೀ ದೇಶ ಮಾತನಾಡುತ್ತಿದೆ. ದಾಖಲೆಗಳು ಹಾದಿಬೀದಿಯಲ್ಲಿ ಹೊರಳಾಡುತ್ತಿವೆ! ನಿಮ್ಮ ಸಮಾಜವಾದಿ ಮುಖವಾಡ, ಅಹಿಂದಾ ಅಲಂಕಾರ, ಸತ್ಯವಂತನ ಸಿಂಗಾರ.. ಇದೆಲ್ಲವೂ ಕಳಚಿಬಿದ್ದಿದೆ. ಅಸಹ್ಯವಾಗುವಷ್ಟು ಅನಾಚಾರ ಮಾಡಿ ಅಹಿಂದ ರಕ್ಷಣೆ ಪಡೆಯಲು ಯತ್ನಿಸುತ್ತಿರುವ ನಿಮ್ಮ ಅಸಹಾಯತೆ ನನಗೆ ಅರ್ಥವಾಗುತ್ತದೆ. ಪಾಪ.. ನಿಮ್ಮ ಪಕ್ಷದವರೇ ನಿಮಗೆ ‘ಶರಪಂಜರ’ ಸೃಷ್ಟಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕುಮಾರಸ್ವಾಮಿ ರಾಜ್ಯಕ್ಕೆ ಕೈಗಾರಿಕೆ ತರಲಿ, ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎನ್ನುತ್ತೀರಿ. ಅದು ನನಗೆ ಗೊತ್ತಿದೆ. ನಾನು ಕೇಂದ್ರ ಸಚಿವನಾಗಿ ಇನ್ನೂ ಎರಡು ತಿಂಗಳಾಗಿಲ್ಲ. ರಾಜ್ಯದ ಕೆಲಸ ಮಾಡೋಣ ಎಂದರೆ ನಿಮ್ಮ ಅಸಹಕಾರ, ಅಸೂಯೆ ಅಡ್ಡಿ. ಒಂದು ನಾಲಿಗೆ ಮೇಲೆ ಸಹಕಾರ, ಅಸಹಕಾರ.. ಇದು ಹೇಗೆ ಸಾಧ್ಯ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ, ಎರಡು ನೀತಿ.. ನಿಮ್ಮ ಐಡಿಯಾಲಜಿ! ಆ ಸಿದ್ದಾಲಜಿ (Siddalogy) ನನಗೆ ಗೊತ್ತಿಲ್ಲದಲ್ಲ ಸಿದ್ದರಾಮಯ್ಯನವರೇ.. ರಾಜ್ಯಕ್ಕೆ ಒಳ್ಳೆಯದಾಗಲಿ ಎನ್ನುವ ಆಶಯ ಇರಲಿ, ನನ್ನ ಮೇಲೆ ಅಸೂಯೆ ಏಕೆ? ನಿಮ್ಮ ಸಕಲ ಗುಣಗಳ ಸಿದ್ದಾಲಜಿ ನನಗೆ ಚೆನ್ನಾಗಿಯೇ ಗೊತ್ತಿದೆ ಎಂದು ಹೇಳಿದ್ದಾರೆ.

ದೇಶ

ತಿರುವನಂತಪುರಂ: ಕೇರಳದ ತಿರುವನಂತಪುರದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದೆ. ಕಳೆದ ಕೆಲವು ವಾರಗಳಿಂದ ಭಾರೀ ಮಳೆಯಾಗುತ್ತಿದೆ. ಆ ಮೂಲಕ ಕೇರಳದ ವಯನಾಡು ಪ್ರದೇಶದಲ್ಲಿ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಈ ಭಾರಿ ಮಳೆಯ ನಂತರ ಮುಂಜಾನೆ ಭೂಕುಸಿತ ಸಂಭವಿಸಿದೆ. ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಸೂರಲ್ಮಲೈ ಪ್ರದೇಶದಲ್ಲಿ ಮೊದಲ ಭೀಕರ ಭೂಕುಸಿತ ಸಂಭವಿಸಿದೆ.

ನಂತರ, ಮುಂಜಾನೆ 4.30ಕ್ಕೆ 2ನೇ ಭಾರಿ ಮತ್ತೊಂದು ಭೂಕುಸಿತ ಸಂಭವಿಸಿದೆ. ಸತತ ಭೂಕುಸಿತದಿಂದಾಗಿ ವೈತ್ತಿರಿ, ವೆಲ್ಲೇರಿಮಲೈ ಮತ್ತು ಮೇಪ್ಪಾಡಿ ಪ್ರದೇಶಗಳು ತೀವ್ರ ಹಾನಿಗೊಳಗಾಗಿವೆ. ಅಟ್ಟಮಲೈನಿಂದ ಮುಂಡಗಿ ಪ್ರದೇಶಕ್ಕೆ ತೆರಳಲು ಇದ್ದ ಒಂದೇ ಒಂದು ಸೇತುವೆ ಕೂಡ ಕೊಚ್ಚಿ ಹೋಗಿದೆ.

ಹೀಗಾಗಿ, 500 ಮನೆಗಳಿಗೆ ಸೇರಿದ ಸಾವಿರಾರು ಜನರು ಪ್ರತ್ಯೇಕ ದ್ವೀಪದಲ್ಲಿ ಸಿಕ್ಕಿಕೊಂಡಂತೆ ಆಗಿದ್ದಾರೆ. ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ಹೆಲಿಕಾಪ್ಟರ್ ಮೂಲಕ ಸಂತ್ರಸ್ತ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯ ನಡೆಯುತ್ತಿದೆ. ಹಲವರ ಸ್ಥಿತಿ ತಿಳಿಯದ ಕಾರಣ ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ.

ಭೂಕುಸಿತದಲ್ಲಿ ನೂರಾರು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದೆ. ಬಳಿಕ ನಾಪತ್ತೆಯಾದವರನ್ನು ರಕ್ಷಿಸುವ ಕಾರ್ಯ ಚುರುಕುಗೊಂಡಿದೆ. ಅರಕ್ಕೋಣಂ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ಧಾವಿಸಿದೆ.

ಭೂಕುಸಿತ ಪ್ರದೇಶದಲ್ಲಿ ಬೀಳುತ್ತಿರುವ ಮಳೆಯಿಂದಾಗಿ ರಕ್ಷಣಾ ಕಾರ್ಯ ನಡೆಸಲು ತೊಂದರೆಯಾಗಿದೆ ಎಂದು ವರದಿಗಳಾಗಿವೆ. ಏತನ್ಮಧ್ಯೆ, ವಯನಾಡು ಭೂಕುಸಿತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.

“ವಯನಾಡಿನ ಕೆಲವು ಭಾಗಗಳು ಭೂಕುಸಿತದಿಂದ ಹಾನಿಗೊಳಗಾಗಿವೆ. ನನ್ನ ಆಲೋಚನೆಗಳು ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೂ ಇವೆ; ಗಾಯಾಳುಗಳೊಂದಿಗೆ ಪ್ರಾರ್ಥನೆಗಳೂ ಇವೆ. ಎಲ್ಲಾ ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ” ಕೇರಳಕ್ಕೆ ಎಲ್ಲ ನೆರವು ನೀಡಲು ಕೇಂದ್ರ ಸರಕಾರ ಸಿದ್ಧವಿದೆ ಎಂದ ಮೋದಿ, ಕೇರಳ ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ.

ಅಲ್ಲದೆ, “ವಯನಾಡು ಭೂಕುಸಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂ.ಗಳನ್ನು ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲಾಗುವುದು” ಎಂದೂ ಅವರು ಹೇಳಿದ್ದಾರೆ. ಅದೇ ರೀತಿ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ರಾಜ್ಯ ಸಚಿವ ಸುರೇಶ್ ಗೋಪಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ವಯನಾಡಿನ ಪರಿಸ್ಥಿತಿಯನ್ನು ವಿಚಾರಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು:
“ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಮೃತಪಟ್ಟ ಘಟನೆ ನೋವಿನ ಸಂಗತಿಯಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಹಾಗೂ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಪರ್ತಿಪಕ್ಷದ ನಾಯಕ ರಾಹುಲ್ ಗಾಂಧಿ:
“ವಯನಾಡಿನ ಮೇಪ್ಪಾಡಿ ಬಳಿ ಸಂಭವಿಸಿದ ಭಾರೀ ಭೂಕುಸಿತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ನನ್ನ ಆಳವಾದ ಸಂತಾಪವನ್ನು ಅರ್ಪಿಸುತ್ತೇನೆ. ಇನ್ನೂ ಸಿಕ್ಕಿಬಿದ್ದಿರುವವರನ್ನು ಶೀಘ್ರದಲ್ಲೇ ರಕ್ಷಿಸಲಾಗುವುದು ಎಂದು ನಾನು ಭಾವಿಸುತ್ತೇನೆ. ನಾನು ಕೇರಳ ಮುಖ್ಯಮಂತ್ರಿ ಮತ್ತು ವಯನಾಡು ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ನನಗೆ ಭರವಸೆ ನೀಡಿದ್ದಾರೆ.

ಎಲ್ಲಾ ಏಜೆನ್ಸಿಗಳೊಂದಿಗೆ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು, ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲು ಮತ್ತು ಪರಿಹಾರ ಕಾರ್ಯಗಳಿಗೆ ನೆರವು ಅಗತ್ಯವಿದ್ದರೆ ನಮಗೆ ತಿಳಿಸಲು ನಾನು ಅವರನ್ನು ಕೇಳಿದ್ದೇನೆ. ನಾನು ಕೇಂದ್ರ ಸಚಿವರೊಂದಿಗೆ ಮಾತನಾಡುತ್ತೇನೆ ಮತ್ತು ವಯನಾಡಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಕೇಳುತ್ತೇನೆ. ಎಲ್ಲಾ ಯುಡಿಎಫ್ (UDF) ಕಾರ್ಯಕರ್ತರು ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ಆಡಳಿತಕ್ಕೆ ಸಹಾಯ ಮಾಡಲು ನಾನು ವಿನಂತಿಸುತ್ತೇನೆ” ಎಂದು ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ತಿಳಿಸಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ:
“ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಹಲವರು ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸಲು ಮತ್ತು ತುರ್ತು ವೈದ್ಯಕೀಯ ನೆರವು ನೀಡಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ನಾನು ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ:
“ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ಘಟನೆಗಳು ತೀವ್ರ ಕಳವಳಕಾರಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಯುದ್ಧಕಾಲದ ಆಧಾರದ ಮೇಲೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ರಕ್ಷಣಾ ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸಲು ಎರಡನೇ ತಂಡ ತೆರಳಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ರಾಜಕೀಯ

 ಡಿ.ಸಿ.ಪ್ರಕಾಶ್

ನವದೆಹಲಿ: “ಪ್ರಧಾನಿ ಮೋದಿ ತಮ್ಮ ಶರ್ಟ್‌ನ ಮೇಲೆ ಧರಿಸಿರುವ ಕಮಲದ ಚಿಹ್ನೆಯಿಂದ ಪ್ರತಿನಿಧಿಸುವ ಚಕ್ರವ್ಯೂಹದಲ್ಲಿ ಭಾರತ ಸಿಲುಕಿಕೊಂಡಿದೆ. ಮಹಾಭಾರತದಲ್ಲಿ ಅಭಿಮನ್ಯು ಚಕ್ರವ್ಯೂಹದಲ್ಲಿ ಸಿಕ್ಕಿಬಿದ್ದಂತೆ ಭಾರತವೂ ಮೋದಿ ಆಡಳಿತದಲ್ಲಿ ಸಿಕ್ಕಿಬಿದ್ದಿದೆ” ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಕುರಿತು ಮಾತನಾಡಿದರು. ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ, “ಭಾರತದಲ್ಲಿ ಭಯದ ವಾತಾವರಣವಿದೆ. ಆ ಭಯ ನಮ್ಮ ದೇಶದ ಎಲ್ಲ ಭಾಗಗಳಿಗೂ ಹಬ್ಬಿದೆ. ಬಿಜೆಪಿಯಲ್ಲಿ ಒಬ್ಬರಿಗೆ ಮಾತ್ರ ಪ್ರಧಾನಿ ಕನಸು ಕಾಣಲು ಅವಕಾಶವಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಿಯಾಗಬೇಕಾದರೆ ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಬಿಜೆಪಿ ಆಡಳಿತದಲ್ಲಿ ಕೇಂದ್ರ ಸಚಿವರು, ರೈತರು, ಕಾರ್ಮಿಕರು ಎಲ್ಲರೂ ಭಯದಲ್ಲಿದ್ದಾರೆ. ಈ ಭಯ ಭಾರತದಲ್ಲಿ ಏಕೆ ಆಳವಾಗಿದೆ ಎಂಬುದು ನನ್ನ ಒಂದೇ ಪ್ರಶ್ನೆಯಾಗಿದೆ. ನನ್ನ ಮಾತಿಗೆ ಬಿಜೆಪಿಯವರು ನಗುತ್ತಿದ್ದರೂ ಅವರಿಗೆ ಒಳಗೊಳಗೆ ಒಂದು ರೀತಿಯ ಭಯ ಕಾಡುತ್ತಿದೆ.

ಪ್ರಧಾನಿ ಮೋದಿ ತಮ್ಮ ಶರ್ಟ್‌ನ ಮೇಲೆ ಧರಿಸಿರುವ ಕಮಲದ ಚಿಹ್ನೆಯಿಂದ ಪ್ರತಿನಿಧಿಸುವ ಚಕ್ರವ್ಯೂಹದಲ್ಲಿ ಭಾರತ ಸಿಲುಕಿಕೊಂಡಿದೆ. ಮಹಾಭಾರತದಲ್ಲಿ ಅಭಿಮನ್ಯು ಚಕ್ರವ್ಯೂಹದಲ್ಲಿ ಸಿಕ್ಕಿಬಿದ್ದಂತೆ ಭಾರತವೂ ಮೋದಿ ಆಡಳಿತದಲ್ಲಿ ಸಿಕ್ಕಿಬಿದ್ದಿದೆ. ಭಾರತವನ್ನು ವಶಪಡಿಸಿಕೊಂಡಿರುವ ಬಿಜೆಪಿಯ ಚಕ್ರವ್ಯೂಹದ ಹಿಂದೆ 3 ಶಕ್ತಿಗಳಿವೆ. ಅವುಗಳು ಯಾವುದೆಂದರೆ,

ಭಾರತದ ಎಲ್ಲಾ ಸಂಪನ್ಮೂಲಗಳ ಮೇಲೆ ಹಿಡಿತ ಹೊಂದಿರುವ ಇಬ್ಬರು ವ್ಯಕ್ತಿಗಳು, ಸಿಬಿಐ, ಜಾರಿ ನಿರ್ದೇಶನಾಲಯದಂತಹ ಕೇಂದ್ರ ಸರ್ಕಾರದ ಸಂಸ್ಥೆಗಳು, ರಾಜಕೀಯ ಅಧಿಕಾರದ ಆಸೆ. ಈ ಮೂರೂ ಸೇರಿ ಭಾರತವನ್ನು ಹಾಳು ಮಾಡಿದೆ. ಇತ್ತೀಚೆಗೆ ಮಂಡನೆಯಾದ ಕೇಂದ್ರ ಬಜೆಟ್ ಈ ಚಕ್ರವ್ಯೂಹದ ಶಕ್ತಿಯನ್ನು ದುರ್ಬಲಗೊಳಿಸುತ್ತದೆ ಎಂಬುದು ನನ್ನ ಅನಿಸಿಕೆ.

ಕೇಂದ್ರ ಬಜೆಟ್ ಈ ದೇಶದ ರೈತರು, ಯುವಕರು, ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳಿಗೆ ಸಹಾಯ ಮಾಡುತ್ತದೆ ಎಂದು ಹೇಳಲಾಗಿದೆ. ಆದರೆ, ನನ್ನ ದೃಷ್ಟಿಯಲ್ಲಿ ಈ ಬಜೆಟ್‌ನ ಏಕೈಕ ಉದ್ದೇಶವೆಂದರೆ, ಏಕಸ್ವಾಮ್ಯ ಮತ್ತು ಪ್ರಜಾಪ್ರಭುತ್ವವನ್ನು ನಾಶಪಡಿಸುವ ಸರ್ಕಾರಿ ಸಂಸ್ಥೆಗಳ ರಚನೆಯನ್ನು ಬಲಪಡಿಸುವುದು. ಏಕೆಂದರೆ, ಸಣ್ಣ ಉದ್ದಿಮೆಗಳಿಗೆ ಭಾರಿ ಹೊಡೆತ ನೀಡಿರುವ ತೆರಿಗೆ ಭಯೋತ್ಪಾದನೆಗೂ ಬಜೆಟ್‌ಗೂ ಯಾವುದೇ ಸಂಬಂಧವಿಲ್ಲ. ಜಿಎಸ್‌ಟಿ ಒಂದು ತೆರಿಗೆ ಭಯೋತ್ಪಾದನೆ. ಜಿಎಸ್‌ಟಿಯಿಂದ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ನಾಶವಾಗುತ್ತವೆ. ಕೇಂದ್ರ ಸರ್ಕಾರ ಜಿಎಸ್‌ಟಿ ಮೂಲಕ ತೆರಿಗೆ ಭಯೋತ್ಪಾದನೆಯನ್ನು ಹೇರಿದೆ.

‘ಅಗ್ನಿಪಥ್’ ಯೋಜನೆಯಡಿ ಸೇವೆ ಸಲ್ಲಿಸುತ್ತಿರುವ ಸೈನಿಕರಿಗೆ ಪಿಂಚಣಿ ನೀಡಲು ಬಜೆಟ್‌ನಲ್ಲಿ ಯಾವುದೇ ಹಣಕಾಸಿನ ಹಂಚಿಕೆ ಇಲ್ಲ. ಯುವಕರನ್ನು ಬಾಧಿಸುವ ದೊಡ್ಡ ಸಮಸ್ಯೆ ಎಂದರೆ ಪ್ರಶ್ನೆ ಪತ್ರಿಕೆ ಸೋರಿಕೆ. ಆದರೆ ಹಣಕಾಸು ಸಚಿವರು ಬಜೆಟ್‌ನಲ್ಲಿ ಈ ಬಗ್ಗೆ ಏನನ್ನೂ ಪ್ರಸ್ತಾಪಿಸಿಲ್ಲ. ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ 70 ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆಗಳು ನಡೆದಿವೆ. ಅಲ್ಲದೆ, ಕಳೆದ 10 ವರ್ಷಗಳಲ್ಲಿ ನಡೆದ ನೀಟ್ ಪರೀಕ್ಷೆಯ ಪತ್ರಿಕೆಗಳ ಸೋರಿಕೆ ಬಗ್ಗೆ ಬಜೆಟ್‌ನಲ್ಲಿ ಯಾವುದೇ ಪದವಿಲ್ಲ. ಮೋದಿ ಸರ್ಕಾರ ನಿರುದ್ಯೋಗ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಮಾನಾರ್ಥಕವಾಗಿದೆ. ಕೇಂದ್ರ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಕಳೆದ 20 ವರ್ಷಕ್ಕಿಂತ ಕಡಿಮೆ ಹಣ ಮೀಸಲಿಡಲಾಗಿದೆ.

ಅದೇ ರೀತಿ ಬಜೆಟ್‌ನಲ್ಲಿ ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಶಾಸನಬದ್ಧ ಖಾತರಿ ಇಲ್ಲ. ಎನ್‌ಡಿಎ ಸರ್ಕಾರ ಮಾಡದ ಕೆಲಸವನ್ನು ನಾವು ಮಾಡುತ್ತೇವೆ ಎಂದು ರೈತರಿಗೆ ಹೇಳಲು ಬಯಸುತ್ತೇನೆ. ಇದೇ ಸದನದಲ್ಲಿ, ನಾವು ಕನಿಷ್ಟ ಬೆಂಬಲ ಬೆಲೆಗೆ ಶಾಸನಬದ್ಧ ಖಾತರಿ ಮಸೂದೆಯನ್ನು ಅಂಗೀಕರಿಸುತ್ತೇವೆ. ಈ ಬಜೆಟ್‌ಗೂ ಮುನ್ನ ಮಧ್ಯಮ ವರ್ಗದವರು ಪ್ರಧಾನಿ ಮೋದಿ ಅವರನ್ನು ಬೆಂಬಲಿಸಿದ್ದರು. ಈಗ ಈ ಬಜೆಟ್ ಮೂಲಕ ಬಿಜೆಪಿ ಸರ್ಕಾರ ಅದೇ ಮಧ್ಯಮ ವರ್ಗದ ಬೆನ್ನು ಮತ್ತು ಎದೆಗೆ ಚೂರಿ ಹಾಕಿದೆ.

ಭಾರತದ ಮೂಲಸೌಕರ್ಯ ಮತ್ತು ವ್ಯವಹಾರಗಳನ್ನು ಕೇವಲ ಇಬ್ಬರು ವ್ಯಕ್ತಿಗಳು ಮಾತ್ರ ನಿಯಂತ್ರಿಸುತ್ತಿದ್ದಾರೆ. ಅವರು ವಿಮಾನ ನಿಲ್ದಾಣಗಳು, ದೂರಸಂಪರ್ಕ ಕಂಪನಿಗಳು, ಬಂದರುಗಳು ಇತ್ಯಾದಿಗಳನ್ನು ಹೊಂದಿದ್ದಾರೆ. ಮುಂದೆ ರೈಲ್ವೆಗೂ ಕಾಲಿಡಲಿದ್ದಾರೆ. ಅವರಿಗೆ ಭಾರತದ ಸಂಪತ್ತನ್ನು ತೆಗೆದುಕೊಳ್ಳುವ ಏಕಸ್ವಾಮ್ಯ ಹಕ್ಕನ್ನು ನೀಡಲಾಗಿದೆ.

ಬಜೆಟ್ ಅಧಿವೇಶನಕ್ಕೂ ಮುನ್ನ ಹಣಕಾಸು ಸಚಿವಾಲಯದಲ್ಲಿ ನಡೆದ ಸಾಂಪ್ರದಾಯಿಕ ‘ಅಲ್ವಾ’ ಸಮಾರಂಭದಲ್ಲಿ ಒಬ್ಬನೇ ಒಬ್ಬ ಆದಿವಾಸಿ ಅಥವಾ ದಲಿತ ಅಧಿಕಾರಿಯೂ ಕಾಣಲಿಲ್ಲ. ಒಟ್ಟು 20 ಅಧಿಕಾರಿಗಳು ಕೇಂದ್ರ ಬಜೆಟ್ ಸಿದ್ಧಪಡಿಸಿದರು. ಅವರಲ್ಲಿ ಒಬ್ಬರೂ ಹಿಂದುಳಿದ, ದಲಿತ ಅಥವಾ ಬುಡಕಟ್ಟು ಸಮುದಾಯಕ್ಕೆ ಸೇರಿದವರಲ್ಲ. ದಲಿತರು, ಆದಿವಾಸಿಗಳು ಮತ್ತು ಹಿಂದುಳಿದ ಜನರು ಭಾರತದ ಜನಸಂಖ್ಯೆಯಲ್ಲಿ ಶೇ.73ರಷ್ಟು ಇದ್ದಾರೆ. ಆದರೆ ಕೇಂದ್ರ ಬಜೆಟ್‌ನಿಂದ ಅವರಿಗೆ ಏನೂ ಸಿಕ್ಕಿಲ್ಲ.

ಬಿಜೆಪಿಯ ಚಕ್ರವ್ಯೂಹ ಕೋಟ್ಯಂತರ ಜನರಿಗೆ ಹಾನಿ ಮಾಡುತ್ತದೆ. ನಾವು ಈ ಚಕ್ರವ್ಯೂಹವನ್ನು ಮುರಿಯಲಿದ್ದೇವೆ. ಇದನ್ನು ಮಾಡುವ ಮಾರ್ಗವೇನಂದರೆ, ನಿಮ್ಮನ್ನು ಹೆದರಿಸುವುವ ಜಾತಿವಾರು ಜನಗಣತಿಯೇ. ಇಂಡಿಯಾ ಮೈತ್ರಿಕೂಟವು ಈ ಸದನದಲ್ಲಿ ಕನಿಷ್ಠ ಬೆಂಬಲ ಬೆಲೆಯ ಶಾಸನಬದ್ಧ ಖಾತರಿ ಮಸೂದೆಯನ್ನು ಅಂಗೀಕರಿಸುತ್ತದೆ. ಅದೇ ರೀತಿ ಜಾತಿವಾರು ಜನಗಣತಿ ನಡೆಸುತ್ತೇವೆ. ನೀವು ಇಷ್ಟಪಡುತ್ತೀರೋ ಇಲ್ಲವೋ ಅದು ಸಂಭವಿಸುತ್ತದೆ.

ಭಾರತದ ಸ್ವರೂಪವೇ ಬೇರೆ. ಪ್ರತಿಯೊಂದು ಧರ್ಮವು ಚಕ್ರವ್ಯೂಹಕ್ಕೆ ವಿರೋಧಿ ತಂತ್ರವನ್ನು ಹೊಂದಿದೆ. ಹಿಂದೂ ಧರ್ಮದಲ್ಲಿಯೂ ಸಹ ಇದೆ. ಹಸಿರು ಕ್ರಾಂತಿ, ಸ್ವಾತಂತ್ರ್ಯ, ಸಂವಿಧಾನದ ಮೂಲಕ ನೀವು ರಚಿಸಿದ ಚಕ್ರವ್ಯೂಹವನ್ನು ನಾವು ಮುರಿಯುತ್ತೇವೆ. ನಿಮ್ಮನ್ನು ನೀವು ಹಿಂದೂ ಎಂದು ಕರೆದುಕೊಳ್ಳುತ್ತೀರಿ. ಆದರೆ ನಿಮಗೆ ಹಿಂದೂ ಧರ್ಮ ಅರ್ಥವಾಗುತ್ತಿಲ್ಲ” ಎಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡಿದರು.